ADVERTISEMENT

ಕಾಂಗ್ರೆಸ್‌ನಿಂದ ನೀಚ ರಾಜಕಾರಣ: ನಳಿನ್‌ಕುಮಾರ್ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ಮೇ 2020, 14:47 IST
Last Updated 22 ಮೇ 2020, 14:47 IST
ನಳಿನ್‌ಕುಮಾರ್ ಕಟೀಲ್‌
ನಳಿನ್‌ಕುಮಾರ್ ಕಟೀಲ್‌   

ಮಂಗಳೂರು: ಕೋವಿಡ್–19 ನಿಯಂತ್ರಣಕ್ಕೆ ಭಾರತ ಕೈಗೊಂಡಿರುವ ಕ್ರಮಗಳನ್ನು ಇಡೀ ವಿಶ್ವವೇ ಶ್ಲಾಘಿಸುತ್ತಿದೆ. ಅದಕ್ಕಾಗಿಯೇ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸ್ಥಾನವನ್ನು ಭಾರತಕ್ಕೆ ನೀಡಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನೀಚ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ಸ್‌ ನಿಧಿಯ ಬಗ್ಗೆ ಕಾಂಗ್ರೆಸ್‌ನ ಅಧಿಕೃತ ಖಾತೆಯಿಂದ ಮಾಡಲಾಗಿರುವ ಟ್ವೀಟ್‌ ಆಧಾರರಹಿತವಾಗಿದ್ದು, ಕಾಂಗ್ರೆಸ್‌ನ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನಿ ವೈಯಕ್ತಿಕವಾಗಿ ಬಳಕೆ ಮಾಡಿದ್ದಾರೆ ಎನ್ನುವ ಮೂಲಕ ಪ್ರಧಾನಿ ವಿರುದ್ಧ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಅಲ್ಲದೇ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ದೂರಿದ್ದಾರೆ.

ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ ಎನ್ನುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲವೂ ಅವ್ಯವಹಾರವಾಗಿಯೇ ಕಾಣುತ್ತದೆ. ದೇಶ ಹಾಗೂ ದೇಶದ ಜನರ ಬಗ್ಗೆ ಕಾಳಜಿ ಇದ್ದರೆ, ಕೊರೊನಾ ವೈರಸ್‌ ಹರಡುವಿಕೆ ತಡೆಯಲು ಒಟ್ಟಾಗಿ ಹೋರಾಡಬೇಕಿತ್ತು. ಅದನ್ನು ಬಿಟ್ಟು ವಲಸೆ ಕಾರ್ಮಿಕರನ್ನು ಎತ್ತಿ ಕಟ್ಟುವುದು, ಜನರನ್ನು ಬೀದಿಗೆ ಇಳಿಸುವ ಮೂಲಕ ನೀಚ ರಾಜಕಾರಣವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ಸೋನಿಯಾ ಗಾಂಧಿ ವಿರುದ್ಧ ಸಾಗರದಲ್ಲಿ ಪ್ರಕರಣ ದಾಖಲಿಸಿರುವುದನ್ನು ಸಮರ್ಥಿಸಿಕೊಂಡ ನಳಿನ್‌ಕುಮಾರ್‌, ‘ಪ್ರಕರಣವನ್ನು ದಾಖಲಿಸಿಕೊಂಡಿರುವ ಠಾಣಾಧಿಕಾರಿ ಪ್ರವೀಣ್‌ಕುಮಾರ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಕರಣವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು. ದೇಶದ ಪ್ರಧಾನಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.