ADVERTISEMENT

ರಾಜಕೀಯ ಪ್ರೇರಿತ ದಾಳಿ ಆರೋಪಕ್ಕೆ ನಳಿನ್‌ ಕುಮಾರ್‌ ಕಟೀಲ್‌ ತಿರುಗೇಟು

ಮಾಡಿದ್ದನ್ನು ಒಪ್ಪಿಕೊಂಡ ಕಾಂಗ್ರೆಸ್ಸಿಗರು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 9:42 IST
Last Updated 5 ಅಕ್ಟೋಬರ್ 2020, 9:42 IST
ಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌
ಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌   
"ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ"
""
""

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಮನೆ ಹಾಗೂ ವಿವಿಧ ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು, ರಾಜಕೀಯ ವಿರೋಧಿಗಳನ್ನು ಹಣಿಯಲು ಸಿಬಿಐ ಅನ್ನು ಬಳಸುತ್ತಿತ್ತೆಂದು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ ಎಂದು ಟಾಂಗ್‌ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ ಸಿಬಿಐ ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ!' ಎಂದು ಹೇಳಿದ್ದಾರೆ.

'ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಇ.ಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ' ಎಂದು ಪ್ರಶ್ನಿಸಿದ್ದಾರೆ.

ADVERTISEMENT

'ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು, ಅವರು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ' ಎಂದು ಹೇಳಿದ್ದಾರೆ.

ಯುವ ಕಾಂಗ್ರೆಸ್ ಪ್ರತಿಭಟನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ಇಂದು ಬೆಳಗ್ಗೆ ಸಿಬಿಐ ನಡೆಸಿದ್ದ ದಾಳಿಯನ್ನು ಖಂಡಿಸಿ ಯುವ ಕಾಂಗ್ರೆಸ್‌‌ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಜಿಲ್ಲಾ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌‌‌ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಪ್ರತಿಭಟನಾಕಾರರು ರಸ್ತೆ ತಡೆ ಹಾಗೂ ರಸ್ತೆ ಮಧ್ಯೆ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಈ ನಡುವೆ ಪ್ರತಿಭಟನಾಕಾರರು ಕೊರೊನಾ ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಮಿಥುನ್‌‌ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.