ADVERTISEMENT

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ; ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 9:25 IST
Last Updated 26 ಆಗಸ್ಟ್ 2025, 9:25 IST
   

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಹಿಂದೆ ಷಡ್ಯಂತ್ರ ನಡೆದಿದ್ದು, ಇದರ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, ‘ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಕೆಡಿಸಲು ಮಾಡಿರುವ ಷಡ್ಯಂತ್ರವು ರಾಷ್ಟ್ರೀಯ ಸುರಕ್ಷತೆಗೂ ಧಕ್ಕೆ ತರುವಂತಹದ್ದು. ಇದರ ಹಿಂದೆ ಷಡ್ಯಂತ್ರ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಆರೋಪಿಸಿದ್ದಾರೆ. ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಲು ಒತ್ತಡವಿತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಇದರ ಹಿಂದೆ ಅಂತರರಾಷ್ಟ್ರೀಯ ಮಟ್ಟದ ಜಾಲ ಇದೆ. ಭಾರಿ ಹಣಕಾಸಿನ ವ್ಯವಹಾರ ನಡೆದಿರಬಹುದು ಎಂಬ ಸಂಶಯವಿದ್ದು, ಇದರ ತನಿಖೆಯನ್ನು ಎನ್‌ಐಗೆ ವಹಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆದಿದ್ದರೂ ಇಲ್ಲಿನ ಹಿಂದೂಗಳು ಹಾಗೂ ನಮ್ಮ ಪಕ್ಷವಾಗಲಿ ತನಿಖೆಗೆ ಸಹಕರಿಸುತ್ತಾ ಬಂದಿದೆ. ಇದೇ ಬೇರೆ ಧರ್ಮದ ಧಾರ್ಮಿಕ ಕೇಂದ್ರದ ಬಗ್ಗೆ ಹೀಗೆ ಅಪಪ್ರಚಾರ ನಡೆಯುತ್ತಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತು’ ಎಂದು ಪ್ರಶ್ನಿಸಿದರು.

ADVERTISEMENT

‘ಕ್ಷೇತ್ರದ ಹೆಸರು ಕೆಡಿಸುವ ಪ್ರಕ್ರಿಯೆ ಶುರುವಾಗಿದ್ದು ಸಮೀರ್‌ ಎಂ.ಡಿ. ಮಾಡಿದ ವಿಡಿಯೊದಿಂದ. ಸರ್ಕಾರ ಆತನ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕಿತ್ತು. ಆತನನ್ನು ಇದುವರೆಗೂ ಏಕೆ ಬಂಧಿಸಿಲ್ಲ’ ಎಂದು ಪ್ರಶ್ನಿಸಿದರು.

ಶಾಸಕ ಡಾ.ವೈ.ಭರತ್ ಶೆಟ್ಟಿ, ‘ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸುವ ಮೂಲಕ ಧರ್ಮಸ್ಥಳದ ಕುರಿತು ಕೆಟ್ಟದಾಗಿ ಚಿತ್ರಿಸಲಾಗಿದೆ. ಇದರ ಹಿಂದೆ ನಾಟಟ ನಡೆದಿದೆ. ಇದನ್ನೆಲ್ಲ ಮಾಡಿದ್ದು ಯಾರು ಎಂದು ಗೊತ್ತಾಗಬೇಕಿದೆ. ಈ ಕ್ಷೇತ್ರಕ್ಕೆ ಸಂಬಂಧಿಸಿ ಸಮೀರ್ ಕೃತಕ ಬುದ್ಧಿಮತ್ತೆ ಆಧರಿಸಿದ ವಿಡಿಯೊ ತಯಾರಿಸಿದ್ದು, ಅದಕ್ಕೆ ಭಾರಿ ಹಣದ ಅಗತ್ಯ ಇದೆ. ಈ ವಿಡಿಯೊವನ್ನು ಪ್ರಚುರಪಡಿಸುವುದಕ್ಕೂ ಆರ್ಥಿಕ ನೆರವು ಬೇಕು. ಅದರ ಮೂಲ ಪತ್ತೆಗೆ ಎನ್‌ಐಎ ಅಥವಾ ಜಾರಿ ನಿರ್ದೇಶನಾಲಯದ ಅಗತ್ಯ ಇದೆ’ ಎಂದು ಹೇಳಿದರು.

‘ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಕ್ಷಮತೆ ಬಗ್ಗೆ ನಮಗೆ ವಿಶ್ವಾಸ ಇದೆ. ಆದರೆ ಈ ಪ್ರಕರಣದ ಬೇರೆ ರಾಜ್ಯಗಳಿಗೂ ಹಬ್ಬಿದೆ. ಇದನ್ನೆಲ್ಲ ತನಿಖೆ ಮಾಡಲು ಎನ್ಐಎ ಸೂಕ್ತ’ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಸಂಜಯ ಪ್ರಭು, ವಸಂತ ಪೂಜಾರಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.