ADVERTISEMENT

ನಿರ್ದೇಶಕರ ಆಯ್ಕೆ: ಆರ್‌ಬಿಐ ಹೊಸ ನಿಯಂತ್ರಣ ಹೇರಿಲ್ಲ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 4:19 IST
Last Updated 2 ಜುಲೈ 2021, 4:19 IST

ಮಂಗಳೂರು: ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ ಮತ್ತು ವ್ಯವಸ್ಥಾಪಕ ನಿರ್ದೇಶಕರ ಆಯ್ಕೆಗೆ ಸಂಬಂಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ಸುತ್ತೋಲೆಯು ಸಾರ್ವಜನಿಕರಲ್ಲಿ ಹಲವಾರು ಸಂಶಯಗಳಿಗೆ ಎಡೆಮಾಡಿದೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಬಂದಿರುವಂತೆ ಯಾವುದೇ ಹೊಸ ನಿಯಂತ್ರಣಗಳನ್ನು ಆರ್‌ಬಿಐ ಹೇರಿಲ್ಲ. ಸಹಕಾರಿ ಬ್ಯಾಂಕ್‌ಗಳ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚು ವೃತ್ತಿಪರತೆಯನ್ನು ತರುವ ದೃಷ್ಟಿಯಿಂದ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕ್‌ಗಳ ಮಹಾಮಂಡಳದ ಆಡಳಿತ ಮಂಡಳಿಯ ನಿರ್ದೇಶಕ ಹರೀಶ್ ಆಚಾರ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಚುನಾಯಿತ ಪ್ರತಿನಿಧಿಗಳು, ಶಾಸಕರು ಮತ್ತು ಸಂಸದರು ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿಯ ನಿರ್ದೇಶಕರಾಗಲು ಅನರ್ಹರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ವಿಚಾರ ಸತ್ಯಕ್ಕೆ ದೂರವಾಗಿದೆ. ಆರ್‌ಬಿಐ ಈ ಸುತ್ತೋಲೆಯು ಸಹಕಾರ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರ ಕುರಿತದ್ದಾಗಿದೆ. ಬೇರೆ ಬೇರೆ ಸಹಕಾರ ಬ್ಯಾಂಕ್‌ಗಳಲ್ಲಿ ಕಾರ್ಯದರ್ಶಿ, ಪ್ರಧಾನ ವ್ಯವಸ್ಥಾಪಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇತ್ಯಾದಿ ಹುದ್ದೆಗಳಲ್ಲಿರುವ ಬ್ಯಾಂಕ್‍ನ ಅಧಿಕಾರಿಯನ್ನು ಇನ್ನು ಮುಂದೆ ವ್ಯವಸ್ಥಾಪಕ ನಿರ್ದೇಶಕರು ಎಂದು ಕರೆಯಲು ಅದು ಸೂಚಿಸಿದೆ. ಈ ಬಗ್ಗೆ ಈಗಾಗಲೇ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವಗಳ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಇದರ ಅಡಿಯಲ್ಲಿ ಬರದೇ ಇರುವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಬದಲಾವಣೆ ಮಾಡಿ, ವಿದ್ಯಾರ್ಹತೆ ಹೊಂದಿರುವವರಿಗೆ ಬದಲಾವಣೆ ಮಾಡಲು ಅಥವಾ ಸಂಸ್ಥೆಯ ಹೊರಗಿನಿಂದ ಪಡೆದುಕೊಳ್ಳಲು ಅವಕಾಶ ಮಾಡಿಕೊಡುವಂತೆ ಆರ್‌ಬಿಐ ಎಲ್ಲ ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿಗೆ ಸೂಚಿಸಿ, ಸುತ್ತೋಲೆಯನ್ನು ಹೊರಡಿಸಿದೆ’ ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT