ಸಾಂದರ್ಭಿಕ
ಪುತ್ತೂರು: ನ್ಯಾಯಾಲಯಗಳಲ್ಲಿ ದಾಖಲಾಗಿರುವ ಮತ್ತು ನ್ಯಾಯಾಲಯಕ್ಕೆ ದಾಖಲಾಗದೇ ಇರುವ ಪ್ರಕರಣಗಳನ್ನು (ವ್ಯಾಜ್ಯ ಪೂರ್ವ ಪ್ರಕರಣ) ಶನಿವಾರ ಪುತ್ತೂರು ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು.
ಒಟ್ಟು 1,512 ಪ್ರಕರಣಗಳ ಪೈಕಿ 986 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಲಾಗಿದ್ದು, ಫಲಾನುಭವಿಗಳಿಗೆ ಒಟ್ಟು ₹ 2,12,93,947 ಪರಿಹಾರ ಮೊತ್ತ ವಿತರಿಸಲು ಆದೇಶಿಸಲಾಗಿದೆ.
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಜನನ ಮರಣ ನೋಂದಾವಣೆ, ಚೆಕ್ ಬೌನ್ಸ್, ವಿಮಾ ಹಣದ ತಗಾದೆ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ., ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ದೇವರಾಜ್ ವೈ.ಎಚ್.,ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ನೇತೃತ್ವದಲ್ಲಿ ನಡೆದ ಲೋಕ ಅದಾಲತ್ನಲ್ಲಿ ಪ್ರಕರಣಗಳ ಇತ್ಯರ್ಥಕ್ಕೆ ಸಂಧಾನಕಾರರಾಗಿ ವಕೀಲರಾದ ಮಹಮ್ಮದ್ ರಿಯಾಜ್, ಮೋಹಿನಿ, ನಝೀರ್, ಮಿಶ್ರಿಯಾ, ವೈಶಾಕ್ ಅವರು ಸಹಕರಿಸಿದರು.
ಚೆಕ್ ಅಮಾನ್ಯ ಕೇಸುಗಳೇ ಅಧಿಕ:
ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿ ಮಾಡದೆ ಎದುರಿಸುತ್ತಿರುವ ಚೆಕ್ ಅಮಾನ್ಯ ಕೇಸುಗಳೇ ಈ ಬಾರಿಯ ಲೋಕ ಅದಾಲತ್ನಲಿ ಅಧಿಕ ಸಂಖ್ಯೆಯಲ್ಲಿತ್ತು. ಪುತ್ತೂರು ಆರ್ಟಿಒ ಕಚೇರಿಗೆ ಸಂಬಂಧಿಸಿದ ಸುಮಾರು 150ಕ್ಕೂ ಹೆಚ್ಚಿನ ಪ್ರಕರಣಗಳು ಲೋಕ ಅದಾಲತ್ನಲ್ಲಿ ದಾಖಲಾಗಿತ್ತು. ತೆರಿಗೆ ವಂಚನೆಯ ಪ್ರಕರಣಗಳ ಕುರಿತು ಇಲಾಖೆಯು ದೂರು ಸಲ್ಲಿಸಿದ್ದು, ಸುಮಾರು ₹ 1 ಕೋಟಿಗೂ ಅಧಿಕ ತೆರಿಗೆಯನ್ನು ವಂಚಿಸಿರುವ ಪ್ರಕರಣಗಳಿಗೆ ಸಂಬಂಧಿಸಿ ಲೋಕ ಅದಾಲತ್ನಲ್ಲಿ ವಿಚಾರಣೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.