ಮಂಗಳೂರು: ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಹಾಗೂ ಸಕಾಲದಲ್ಲಿ ಆಮ್ಲಜನಕ ಪೂರೈಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಆಮ್ಲಜನಕ ಪೂರೈಕೆದಾರರು, ಐಎಂಎ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಆಮ್ಲಜನಕದ ಕೊರತೆ ಉಂಟಾಗದಂತೆ, ಸಕಾಲದಲ್ಲಿ ಆಮ್ಲಜನಕ ಪೂರೈಸುವ ಕುರಿತು ಚರ್ಚೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ‘ಈಗಾಗಲೇ ಇಎಸ್ಐ ಹಾಗೂ ಬಂಟ್ವಾಳದ ತಾಲ್ಲೂಕು ಆಸ್ಪತ್ರೆಯಲ್ಲಿ ಎಂಸಿಎಫ್ ವತಿಯಿಂದ ಸಿಎಸ್ಆರ್ ಅನುದಾನದಡಿ ಆಮ್ಲಜಕನ ಘಟಕ ನಿರ್ಮಿಸುವ ಕುರಿತು ನಿರ್ಧರಿಸಲಾಗಿದೆ. ಇನ್ನೊಂದು ತಾಲ್ಲೂಕಿಗೆ ಎಂಆರ್ಪಿಎಲ್ ಮೂಲಕ ಘಟಕ ನಿರ್ಮಾಣದ ರೂಪುರೇಷೆ ಸಿದ್ಧಪಡಿಸಲಾಗಿದೆ. ಇನ್ನುಳಿದ ಎರಡು ತಾಲ್ಲೂಕಿಗೆ ಸಣ್ಣ ಪ್ರಮಾಣದ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಯೋಜನೆ ಪೂರ್ಣಗೊಳಿಸುವ ಚಿಂತನೆಯಿದೆ' ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಜಿಲ್ಲಾಡಳಿತದ ವತಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.