ADVERTISEMENT

ಮೂಡುಬಿದಿರೆ, ಮೂಲ್ಕಿಗೆ ಆಮ್ಲಜನಕ ಘಟಕ

ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 6:52 IST
Last Updated 24 ಜುಲೈ 2021, 6:52 IST
ಮೂಡುಬಿದಿರೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಭೆ ನಡೆಸಿದರು. ಶಾಸಕ ಉಮಾನಾಥ ಕೋಟ್ಯಾನ್ ಇದ್ದರು.
ಮೂಡುಬಿದಿರೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಭೆ ನಡೆಸಿದರು. ಶಾಸಕ ಉಮಾನಾಥ ಕೋಟ್ಯಾನ್ ಇದ್ದರು.   

ಮೂಡುಬಿದಿರೆ: ಕೋವಿಡ್ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮೂಡುಬಿದಿರೆ ಮತ್ತು ಮೂಲ್ಕಿ ಸೇರಿದಂತೆ ಜಿಲ್ಲೆಯ 17 ಕೇಂದ್ರಗಳಲ್ಲಿ ಆಮ್ಲಜನಕ ಘಟಕ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.

ಶುಕ್ರವಾರ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು. ಮೂಡುಬಿದಿರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಘಟಕ ಸ್ಥಾಪಿಸಲಾಗುವುದು. ಒಂದು ಕೇಂದ್ರದಲ್ಲಿ ದಿನವೊಂದಕ್ಕೆ ಸುಮಾರು 25 ಸಿಲಿಂಡರ್‌ಗಳಷ್ಟು ಆಮ್ಲಜನಕವನ್ನು ಉತ್ಪಾದಿಸಲಾಗುವುದು. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ದಿನವೊಂದಕ್ಕೆ ಸದ್ಯ ಆರು ಟನ್ ಆಮ್ಲಜನಕದ ಅಗತ್ಯ ಇದ್ದು, ಆಮ್ಲಜನಕ ಘಟಕ ನಿರ್ಮಾಣ ಪೂರ್ಣಗೊಂಡರೆ, ಎಂಟು ಟನ್ ಆಮ್ಲಜನಕ ಉತ್ಪಾದನೆಯಾಗುತ್ತದೆ. ಭವಿಷ್ಯದಲ್ಲಿ ಆಮ್ಲಜನಕದ ಸಮಸ್ಯೆ ಬರಲಾರದು ಎಂದರು.

ಹೋಂ ಐಸೊಲೇಷನ್‌ಗೆ ಅವಕಾಶ ಇಲ್ಲ: ಕೋವಿಡ್ ಸೋಂಕಿತರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುವ ಹಾಗಿಲ್ಲ. ಅಂತಹ ಪ್ರಕರಣಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅವರನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗಳಿಗೆ ದಾಖಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಶೇ 2.3ರಷ್ಟಿದೆ. ದಿನಕ್ಕೆ ಸುಮಾರು 8 ಸಾವಿರದಷ್ಟು ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.