
ಬೆಳ್ತಂಗಡಿ: ‘ಮಾರ್ಚ್ ನಂತರ ಗ್ರಾಮಪಂಚಾಯಿತಿ, ನಗರ ಪಾಲಿಕೆ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಗ್ರಾಮ ಪಂಚಾಯತಿ ಚುನಾವಣೆ ಬಳಿಕ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಮಾಡಬೇಕೇ ಅಥವಾ ಜತೆಗೇ ಮಾಡಬೇಕೇ ಎಂದು ಕೆಲವೇ ದಿನಗಳಲ್ಲಿ ನಿರ್ಧಾರ ಹೊರ ಬರಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕುಕ್ಕೇಡಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ತಾಲ್ಲೂಕಿನಲ್ಲಿ ಚಿರತೆ ಹಾವಳಿ ಗಮನಕ್ಕೆ ಬಂದಿದ್ದು, ಅಧಿಕಾರಿಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಅರಣ್ಯ ಇಲಾಖೆ ಮತ್ತು ಪ್ರಾಣಿ ದಯಾ ಸಂಘದವರ ಜತೆ ಚರ್ಚೆ ಮಾಡಲಾಗುವುದು’ ಎಂದು ತಿಳಿಸಿದರು.
ತಾಲ್ಲೂಕು ಅಂಬೇಡ್ಕರ್ ಭವನಕ್ಕೆ ಈಗಾಗಲೇ ₹3 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ, ಶಾಸಕರ ಬೇರೆ ಅಭಿಪ್ರಾಯದಿಂದ ಕಾಮಗಾರಿ ಆರಂಭಿಸಲು ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಶಾಸಕರ ಜತೆ ಚರ್ಚೆ ಮಾಡಿ ಬಂದಿರುವ ಅನುದಾನ ಬೇರೆ ಕಡೆ ಸ್ಥಳಾಂತರವಾಗದಂತೆ ಕಾಮಗಾರಿ ಶೀಘ್ರದಲ್ಲಿಯೇ ಆರಂಭಿಸಬೇಕಾದ ಅಗತ್ಯವಿದೆ ಎಂದರು.
ಗೇರುಕಟ್ಟೆಯಲ್ಲಿ ಬಾಲಕನ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಪೊಲೀಸರು ಪ್ರಯತ್ನದಲ್ಲಿದ್ದಾರೆ. ಸಾವಿಗೆ ಸೂಕ್ತ ಸಾಕ್ಷಿ ಇನ್ನೂ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತನಾಡುವೆ ಎಂದು ತಿಳಿಸಿದರು.
ಡಿ.ಸಿ ಮನ್ನಾ ಭೂಮಿಗೆ ಸಂಬಂಧಿಸಿ ಜಾಗ ಕಡಿಮೆ ಇದೆ. ಆದರೆ, ಬಂದಿರುವ ಅರ್ಜಿ ಸಂಖ್ಯೆ ಜಾಸ್ತಿ ಇವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.