ಮಂಗಳೂರು: ಕೇರಳದ ಕೋಯಿಕ್ಕೋಡ್ ಬೇಪೂರ್ ಬಳಿ ಅರಬ್ಬಿ ಸಮುದ್ರದಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಹಡಗಿನಲ್ಲಿದ್ದವರನ್ನು ರಕ್ಷಿಸಿದ ಪೈಕಿ, ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಿದ್ದ ಐವರಿಗೆ ಚಿಕಿತ್ಸೆ ಮುಂದುವರಿದಿದೆ.
ಐವರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಇಬ್ಬರಿಗೆ ಕಿವಿ ಮತ್ತು ಮುಖಕ್ಕೆ ಸುಟ್ಟ ಗಾಯಗಳಾಗಿವೆ. ಸ್ಫೋಟದ ಸದ್ದಿನಿಂದ ಅವರಿಗೆ ಶ್ರವಣ ದೋಷ ಕಾಣಿಸಿಕೊಂಡಿದ್ದು, ಕ್ರಮೇಣ ಇದು ಸುಧಾರಿಸಬಹುದು ಎಂದು ಚಿಕಿತ್ಸೆ ನೀಡುತ್ತಿರುವ ಎ.ಜೆ. ಆಸ್ಪತ್ರೆಯ ತಜ್ಞವೈದ್ಯ ದಿನೇಶ್ ಕದಂ ತಿಳಿಸಿದ್ದಾರೆ.
ಸಿಂಗಪುರದ ಎಂ.ವಿ ವ್ಯಾನ್ ಹೈ 503 ಹಡಗಿಗೆ ಕೇರಳದ ಕೋಯಿಕ್ಕೋಡ್ ಬೇಪೂರ್ ಬಳಿ ಅರಬ್ಬಿ ಸಮುದ್ರದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಕರಾವಳಿ ಕಾವಲು ಪಡೆ ಸಿಬ್ಬಂದಿಯ ನೆರವಿನಲ್ಲಿ ಗಾಯಾಳುಗಳನ್ನು ಕರೆತಂದು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.