ಮಂಗಳೂರು:ಕೊಚ್ಚಿಯಲ್ಲಿ ಸ್ವದೇಶಿ ಏರ್ ಕ್ರಾಫ್ಟ್ ಲೋಕಾರ್ಪಣೆಗೊಂಡಿರುವುದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯಾಗಿದೆ. ಮಂಗಳೂರಿನಲ್ಲಿ ₹ 3800 ಕೋಟಿ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ, ಭೂಮಿಪೂಜೆ ಆಗಿದೆ. ಕರ್ನಾಟಕದಲ್ಲಿ ವ್ಯಾಪಾರ, ಉದ್ಯೋಗ ಸಾಮರ್ಥ್ಯ ಹೆಚ್ಚಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಕರ್ನಾಟಕದ ರೈತರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಉತ್ಪಾದನಾ ಕ್ಷೇತ್ರ, ಮೇಕ್ ಇನ್ ಇಂಡಿಯಾ ಅಗತ್ಯ ಇದೆ. ಎಂಟು ವರ್ಷಗಳಲ್ಲಿ ದೇಶದ ಮೂಲಸೌಕರ್ಯದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಭಾರತಮಾಲಾ ಯೋಜನೆಯಲ್ಲಿ ರಸ್ತೆ ನಿರ್ಮಾಣ, ಕರಾವಳಿ ಮೂಲ ಸೌಕರ್ಯಕ್ಕೆ ಸಾಗರಮಾಲಾ ಶಕ್ತಿ ನೀಡಿದೆ. ದೇಶದ ಬಂದರುಗಳ ಸಾಮರ್ಥ್ಯ ದ್ವಿಗುಣಗೊಂಡಿದೆ ಎಂದು ಪಿಎಂ ಮೋದಿ ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರುನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಮೋದಿ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ಜನರು ಕರತಾಡನದ ಮೂಲಕ ಸ್ವಾಗತಿಸಿದರು.
ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮೋದಿ ಅವರಿಗೆ ಹಾರ, ಪೇಟ ತೊಡಿಸಿ ಸ್ವಾಗತಿಸಿದರು. ಉಡುಪಿ ಶ್ರೀಕೃಷ್ಣ ನ ಮೂರ್ತಿ ನೀಡಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪರಶುರಾಮನ ಮೂರ್ತಿ ನೀಡಿದರು.
ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಇದ್ದರು.
ಮುಖ್ಯ ವೇದಿಕೆಗೆ ಪ್ರವೇಶ ಸಿಗದ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಬ್ಯಾರಿಕೇಡ್ ತಳ್ಳಿ ಮುನ್ಬುಗ್ಗಲು ಯತ್ನಿಸಿದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ತಡೆದರು.
ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಮತ್ತು ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್ನ (ಎಂಆರ್ಪಿಎಲ್) ಒಟ್ಟು ₹ 3,783 ಕೋಟಿ ಮೊತ್ತದ ಎಂಟು ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವನ್ನು ಪ್ರಧಾನಿ ನೆರವೇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.