ವಿಟ್ಲ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸಾಹುಲ್ ಹಮೀದ್ ಎಂಬಾತನ ಕಿರುಕುಳ ದಿಂದ ಬಾಲಕಿ ಆತ್ಮಹತ್ಯೆ ಖಂಡಿಸಿ ಮತ್ತು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ಕನ್ಯಾನದಲ್ಲಿ ಬಂದ್ ಆಚರಿಸುವಂತೆ ಮತ್ತು ನಾಲ್ಕು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.
ವಿಟ್ಲದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಜರಂಗದಳ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್, ‘ಆರೋಪಿಯು ಬಾಲಕಿಗೆ ವಾಮಾಚಾರ ಮಾಡಿ ವಶೀಕರಣ ಮೂಲಕ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾನೆ. ಆಕೆಯ ಸಾವಿನ ಬಗ್ಗೆ ಹಲವು ಅನುಮಾನಗಳಿವೆ. ಆಕೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಸರ್ಕಾರಕ್ಕೆ ನಮ್ಮ ಧ್ವನಿ ಮುಟ್ಟಿಸುವ ಉದ್ದೇಶದಿಂದ ಸೋಮವಾರ ಕನ್ಯಾನದಲ್ಲಿ ಎಲ್ಲ ಹಿಂದೂಗಳು ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಬೇಕು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮತ್ತು ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದ ಅವರು ತಿಳಿಸಿದರು.
‘ಸಾವಿರಾರು ಮುಸ್ಲಿಂ ಯುವಕರು ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣು ಮಕ್ಕಳ ಜೀವನ ಹಾಳು ಮಾಡುತ್ತಿದ್ದಾರೆ. ಈ ಬಂದ್ ಮತ್ತು ಪ್ರತಿಭಟನೆ ನಮ್ಮ ವಿರೋಧಿಗಳಿಗೆ ಎಚ್ಚರಿಕೆಯ ಕರೆಗಂಟೆ ಆಗಬೇಕು. ಈ ಘಟನೆ ಬಗ್ಗೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಸಾಹುಲ್ ಹಮೀದ್ ಕುಟುಂಬವನ್ನು ತನಿಖೆಗೊಳಪಡಿಸಬೇಕು. ಬಾಲಕಿಯ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ನೀಡಬೇಕು. ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ತರಬೇಕು. ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.