ಮಂಗಳೂರು: ಬಿಕರ್ನಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಂಡದಿಂದಾಗಿ ಈಚೆಗೆ ನಡೆದ ಅಪಘಾತದಲ್ಲಿ ಮೃತಪಟ್ಟ ಯುವಕ ಆತಿಶ್ನನ್ನು ಕಳೆದುಕೊಂಡು ಅವರ ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿದೆ. ಈ ಕುಟುಂಬಕ್ಕೆ ಸರ್ಕಾರ ₹ 25 ಲಕ್ಷ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.
ಈ ಕುರಿತು ಪಕ್ಷದ ಮುಖಂಡ ಜೆ.ಆರ್.ಲೋಬೊ ನೇತೃತ್ವದ ನಿಯೋಗವು ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.ರಸ್ತೆಯನ್ನು ಸುಸ್ಥಿತಿಯಲ್ಲಿಡದೇ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ರಸ್ತೆಯಲ್ಲಿರುವ ಹೊಂಡಗಳನ್ನು ಮುಚ್ಚಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದೂ ನಿಯೋಗವು ಒತ್ತಾಯಿಸಿದೆ.
‘ಹೆದ್ದಾರಿಯಲ್ಲಿದ್ದ ಹೊಂಡದ ಕಾರಣದಿಂದ ಉಂಟಾದ ಅಪಘಾತದಿಂದ ಆತೀಶ್ ಸತ್ತಿದ್ದರೂ, ಪೋಲಿಸರು ಬೈಕ್ ಸವಾರನದೇ ತಪ್ಪು ಎಂಬ ಅರ್ಥದಲ್ಲಿ ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಆತಿಶ್ ಕುಟುಂಬಕ್ಕೆ ಯಾವುದೇ ಪರಿಹಾರ ಸಿಗಬಾರದು ಎಂಬ ಕಾರಣಕ್ಕೆ ಮಾಡಿದ ಹುನ್ನಾರವಿದು. ಈ ತಪ್ಪನ್ನು ಸರಿ ಪಡಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಗಂಭೀರ ಹೋರಾಟ ಮಾಡಲಿದ್ದೇವೆ’ ಎಂದು ಜೆ.ಆರ್.ಲೋಬೊ ಎಚ್ಚರಿಸಿದ್ದಾರೆ.
‘ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಮತ್ತು ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಅನೇಕ ರಸ್ತೆಗಳು ಹಾಳಾಗಿವೆ. ಎಲ್ಲೆಡೆ ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿವೆ. ಹದಗೆಟ್ಟ ರಸ್ತೆಯಿಂದಾಗಿ ಹಲವಾರು ಅಪಘಾತಗಳು ಸಂಭವಿಸಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ’ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.