ADVERTISEMENT

'ಪಾರದರ್ಶಕ ನೇಮಕಾತಿಗೆ ಅಗತ್ಯ ಕ್ರಮ'

ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 16:40 IST
Last Updated 16 ಮಾರ್ಚ್ 2022, 16:40 IST

ಮಂಗಳೂರು: ಪೌರಕಾರ್ಮಿಕರ ಪಾರದರ್ಶಕ ನೇಮಕಾತಿಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಪೌರಕಾರ್ಮಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಆದಷ್ಟು ಬೇಗ ಕೋವಿಡ್‌ ಮುನ್ನೆಚ್ಚರಿಕಾ ಡೋಸ್ ಲಸಿಕೆಗಳನ್ನು ನೀಡಬೇಕು ಎಂದರು.

ಪೌರ ಕಾರ್ಮಿಕರಿಗೆ ಅಗತ್ಯವಿರುವ ಮಾಸ್ಕ್, ಗ್ಲೌಸ್, ರೇನ್‌ಕೋಟ್, ಸೋಪ್, ಇತ್ಯಾದಿ ಸುರಕ್ಷಿತ ಪರಿಕರಗಳನ್ನು ಸಮರ್ಪಕವಾಗಿ ತಲುಪಿಸಿ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿಬೇಕು. ಅಧಿಕಾರಿಗಳು ಪೌರಕಾರ್ಮಿಕರಿಗೆ ನೀಡುವ ಆಹಾರವನ್ನು ತಾವೇ ಮೊದಲು ಸೇವಿಸಿ ಗುಣಮಟ್ಟ ಪರೀಕ್ಷೆ ಮಾಡುವುದರೊಂದಿಗೆ ಅದರ ಬಗ್ಗೆ ವರದಿ ನೀಡಬೇಕು ಹಾಗೂ ಉತ್ತಮ ಗುಣಮಟ್ಟದ ಆಹಾರ ಅವರಿಗೆ ದೊರೆಯುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.

ADVERTISEMENT

ಪೌರಕಾರ್ಮಿಕರಿಗೆ ನೀಡುವ ವೇತನದಲ್ಲಿ ತಾರತಮ್ಯ ಮಾಡಬಾರದು. ಇ.ಎಸ್.ಐ, ಪಿ.ಎಫ್ ಕಡಿತ ಆಗುತ್ತಿರುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ, ವಿಶ್ರಾಂತಿ ಕೊಠಡಿ, ಶೌಚಾಲಯದ ವ್ಯವಸ್ಥೆ ಮಾಡುವ ಬಗ್ಗೆ ಕ್ರಮ ವಹಿಸಬೇಕು. ಪೌರಕಾರ್ಮಿಕರಿಗೆ ಅಗತ್ಯವಿರುವ ನಿವೇಶನಕ್ಕೆ ಸರಿಯಾದ ಸ್ಥಳ ಗುರುತಿಸಿ ಸರ್ವೆ ಮಾಡಬೇಕು ಎಂದು ಸೂಚಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ ದೇವಿನಮಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.