ADVERTISEMENT

ಅಮೃತಜ್ಯೋತಿ ಯೋಜನೆ ರದ್ದು ಮಾಡಿಲ್ಲ: ಇಂಧನ ಸಚಿವ ಸುನಿಲ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 15:34 IST
Last Updated 5 ಸೆಪ್ಟೆಂಬರ್ 2022, 15:34 IST
ವಿ.ಸುನಿಲ್‌ ಕುಮಾರ್‌
ವಿ.ಸುನಿಲ್‌ ಕುಮಾರ್‌   

ಪುತ್ತೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ರಾಜ್ಯ ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು.

ಪುತ್ತೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಇಂಧನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಅಮೃತಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಿಂಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಆದರೆ, ಈ ಯೋಜನೆಯನ್ನು ರದ್ದುಪಡಿಸಲಾಗಿದೆ ಎನ್ನುವ ಮಾಹಿತಿ ಎಲ್ಲಾ ಕಡೆಗಳಲ್ಲೂ ಹರಿದಾಡುತ್ತಿದ್ದು, ಇದು ತಪ್ಪು ಮಾಹಿತಿ’ ಎಂದರು.

‘ಯೋಜನೆಯನ್ನು ಪಡೆದುಕೊಳ್ಳಲು ಕೆಲವೊಂದು ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಈ ನಿಯಮಾವಳಿಗಳನ್ನು ಅನುಸರಿಸಲು ತೊಂದರೆಯಾಗುತ್ತಿದೆ. ಈ ಕಾರಣಕ್ಕಾಗಿ ನಿಯಮಾವಳಿಗಳನ್ನು ರದ್ದುಪಡಿಸಲಾಗಿದೆಯೇ ಹೊರತು ಯೋಜನೆಯನ್ನು ರದ್ದು ಪಡಿಸಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ADVERTISEMENT

ಹೊಸ ಉತ್ಸಾಹ: ‘ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಬಳಿಕ ಬಿಜೆಪಿಯಲ್ಲಿ ಹೊಸ ಉತ್ಸಾಹ ಮೂಡಿದೆ. ಎರಡು ಲಕ್ಷಕ್ಕೂ ಮಿಕ್ಕಿದ ಜನ ಕೇವಲ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಸಿದ್ದರಾಮೋತ್ಸವಕ್ಕೆ ರಾಜ್ಯದೆಲ್ಲೆಡೆಯಿಂದ ಜನ ಸೇರಿಸಿದರೂ ಅಷ್ಟು ಜನಸ್ತೋಮ ಇರಲಿಲ್ಲ. ಪ್ರಧಾನಿ ಮೋದಿ ಹಾಗೂ ಸರ್ಕಾರಗಳ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಅಷ್ಟೊಂದು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಪ್ರಧಾನಿ ಭೇಟಿ ಮುಂದಿನ ಚುನಾವಣೆಗೂ ಅಣಿಯಾಗುವಂತೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಭರವಸೆ ಮೂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.