ADVERTISEMENT

ಪ್ರವೀಣ್‌ ನೆಟ್ಟಾರು ಪತ್ನಿಗೆ ಕೇಂದ್ರ ಸರ್ಕಾರದಿಂದ ಉದ್ಯೋಗ ನೀಡಲಾಗುವುದು: ಕಟೀಲ್‌

​ಪ್ರಜಾವಾಣಿ ವಾರ್ತೆ
Published 27 ಮೇ 2023, 16:12 IST
Last Updated 27 ಮೇ 2023, 16:12 IST
ಪ್ರವೀಣ್‌ ನೆಟ್ಟಾರು
ಪ್ರವೀಣ್‌ ನೆಟ್ಟಾರು    

ಮಂಗಳೂರು: ‘ದುಷ್ಕರ್ಮಿಗಳಿಂದ ಕೊಲೆಯಾಗಿರುವ ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ನೀಡಿದ್ದ ಗುತ್ತಿಗೆ ಆಧಾರಿತ ನೌಕರಿಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಂತಿ ಮಾಡುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

‘ನೂತನ ಕುಮಾರಿ ಅವರಿಗೆ ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೌಕರಿ ನೀಡಲಾಗಿತ್ತು. ಆ ನೌಕರಿಯಲ್ಲೇ ಅವರನ್ನು ಮುಂದುವರಿಸುವಂತೆ ಮುಖ್ಯಮಂತ್ರಿಯವರನ್ನು ವಿನಂತಿಸುತ್ತೇವೆ. ರಾಜ್ಯ ಸರ್ಕಾರ ಒಪ್ಪದಿದ್ದರೆ ಕೇಂದ್ರ ಸರ್ಕಾರದ ಅಧೀನದ ಯಾವುದಾದರೂ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುತ್ತೇವೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

ನೂತನ ಕುಮಾರಿ ಅವರನ್ನು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ನೂತನಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

ADVERTISEMENT

ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ, ಮುಖ್ಯಮಂತ್ರಿ ಸಚಿವಾಲಯದ ಹಿಂದಿನ ಎಲ್ಲ ಗುತ್ತಿಗೆ ನೇಮಕಾತಿಗಳು ರದ್ದುಗೊಂಡಿವೆ. ಅಂತೆಯೇ ನೂತನ ಕುಮಾರಿ ಅವರಿಗೂ ಕೆಲಸ ಕೈತಪ್ಪಿದೆ.

ನೌಕರಿ ಖಚಿತ: ‘ಬಿಜೆಪಿಯವರು ನೂತನ ಕುಮಾರಿ ಅವರಿಗೆ ಶಾಶ್ವತ ಉದ್ಯೋಗ ಕೊಡಲು ಪ್ರಯತ್ನಿಸಿಲ್ಲ. ಬಿಜೆಪಿಯವರು ಇಷ್ಟು ದಿನವೂ ಮಾಡಿದ್ದೆಲ್ಲ ನಾಟಕ ಎಂಬುದು ಇದರಿಂದ ಬಹಿರಂಗವಾಗಿದೆ. ನೂತನಕುಮಾರಿ ಅವರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಬದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಪರವಾಗಿ ಅವರ ಜೊತೆ ಮಾತುಕತೆ ನಡೆಸಿದ್ದೇವೆ. ಕೂಡಲೇ ಅವರಿಗೆ ಉದ್ಯೋಗ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.