ADVERTISEMENT

ಮುಂಬಡ್ತಿ: ಶಿಕ್ಷಕರ ಹಿತ ಕಾಪಾಡಲು ಆಗ್ರಹ

ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 4:38 IST
Last Updated 5 ಜುಲೈ 2021, 4:38 IST
ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.   

ಮಂಗಳೂರು: ಶಿಕ್ಷಕರ ಹಿಂಬಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ವಿನಂತಿಸಿ, ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘವು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭಾನುವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಶೆರ್ಲಿ ಸುಮಾಲಿನಿ ವಿನಂತಿಸಿದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಯು.ಟಿ. ಖಾದರ್ ಅವರಿಗೂ ಮನವಿ ಸಲ್ಲಿಸಲಾಯಿತು.
ಸಂಘದ ಉಪಾಧ್ಯಕ್ಷೆ ಪ್ರತಿಭಾ, ಜಿಲ್ಲಾ ಕಾರ್ಯದರ್ಶಿ ಪ್ರತೀಪ್, ತಾಲ್ಲೂಕು ಘಟಕದ ಅಧ್ಯಕ್ಷ ಪ್ರೇಮನಾಥ ಮರ್ಣೆ, ಸಂಘಟನಾ ಕಾರ್ಯದರ್ಶಿ ಗಣೇಶ್ ಇದ್ದರು.

ADVERTISEMENT

ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಸುಳ್ಯದಲ್ಲಿ ಮನವಿ ಸಲ್ಲಿಸಲಾಯಿತು. ಸುಳ್ಯ ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣ ಬಿ., ಪದಾಧಿಕಾರಿಗಳಾದ ಉನ್ನಿಕೃಷ್ಣನ್ ಹಾಗೂ ಹಿಂಬಡ್ತಿ ಎದುರಿಸುತ್ತಿರುವ ಶಿಕ್ಷಕರು ಇದ್ದರು. ಪುತ್ತೂರು ತಾಲ್ಲೂಕು ಘಟಕದಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಸಲ್ಲಿಸಲಾಯಿತು.

6ರಿಂದ 8ನೇ ತರಗತಿಯವರೆಗೆ ಬೋಧಿಸಲು ನೇಮಕಗೊಂಡ ಶಿಕ್ಷಕರು ಮಾತ್ರ ಪ್ರೌಢಶಾಲಾ ಶಿಕ್ಷಕರಾಗಿ ಗ್ರೇಡ್ 2 ಹುದ್ದೆಯನ್ನು ಹೊಂದಲು ಅರ್ಹರು ಮತ್ತು ಈ ಹಿಂದೆ ನೀಡಿರುವ ಎಲ್ಲ ಬಡ್ತಿಗಳನ್ನು ಹಿಂಪಡೆಯಬೇಕು ಎಂದು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು (ಕೆಎಟಿ) ಮೇ 12ರಂದು ತೀರ್ಪು ನೀಡಿದೆ. ಈ ಬಗ್ಗೆ ಬಡ್ತಿ ಶಿಕ್ಷಕರ ಸಂಘ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದು, ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಮನವಿ ಸಲ್ಲಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.