ಮಂಗಳೂರು: ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲು ತಿಳಿಸಲಾಗಿದೆ. ಪರೀಕ್ಷಾ ಸಿದ್ಧತೆ ಹಾಗೂ ವಹಿಸಬೇಕಾದ ಕ್ರಮಗಳ ಕುರಿತು ಈಗಾಗಲೇ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಮಾತನಾಡಿ ಅಗತ್ಯ ಸಲಹೆ– ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದರು.
ಎಲ್ಲ ತಾಲ್ಲೂಕುಗಳ ತಹಶೀಲ್ದಾರರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಚರ್ಚಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ಪೊಲೀಸರಿಂದ ಬಂದೋಬಸ್ತ್ ಒದಗಿಸಬೇಕು ಎಂದರು.
12 ಸರ್ಕಾರಿ, 23 ಅನುದಾನಿತ ಹಾಗೂ 16 ಅನುದಾನ ರಹಿತ ಕಾಲೇಜುಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಅವುಗಳಿಗೆ 14 ಮಂದಿ ರೂಟ್ ಆಫೀಸರ್ಗಳನ್ನು ನೇಮಕ ಮಾಡಲಾಗಿದ್ದು, ಒಟ್ಟಾರೆ 31,308 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಅವರಲ್ಲಿ 15,652 ಬಾಲಕರು ಹಾಗೂ 15,656 ಬಾಲಕಿಯರಾಗಿದ್ದಾರೆ. ಕಲಾ ವಿಭಾಗದಲ್ಲಿ 4,329, ವಾಣಿಜ್ಯ ವಿಭಾಗದಲ್ಲಿ 14,987 ಹಾಗೂ ವಿಜ್ಞಾನ ವಿಭಾಗದಲ್ಲಿ 11,992 ವಿದ್ಯಾರ್ಥಿಗಳಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.