ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಲು ನಗರಸಭೆಯ ವಿಶೇಷ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಬುಧವಾರ ಇಲ್ಲಿ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ‘ಹೊರಗುತ್ತಿಗೆ ಕಾರ್ಮಿಕರು ನೇರ ನೇಮಕಾತಿಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಬೆಂಬಲವಾಗಿ ನಾವು ನಿಲ್ಲಬೇಕಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ 700 ಮಂದಿಗೆ ಒಬ್ಬರಂತೆ ಪೌರಕಾರ್ಮಿಕರು ಇರಬೇಕಾಗಿದೆ. ಹೊರಗುತ್ತಿಗೆಯಲ್ಲಿ ನೇಮಕ ಮಾಡಿದರೆ ಆರ್ಥಿಕ ಹೊರೆಯಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರವೇ ನೇರ ನೇಮಕಾತಿ ಮಾಡಿದಲ್ಲಿ ಸಹಕಾರಿಯಾಗಲಿದೆ’ ಎಂದು ಜೀವಂಧರ್ ಜೈನ್ ಹೇಳಿದರು.
ಈ ಪ್ರಸ್ತಾವಕ್ಕೆ ದನಿಗೂಡಿಸಿದ ಸದಸ್ಯ ಭಾಮಿ ಅಶೋಕ ಶೆಣೈ ಅವರು, ‘ಪೌರ ಕಾರ್ಮಿಕರ ನೇರ ನೇಮಕಾತಿ ಮಾಡುವಂತೆ ಶಿಫಾರಸು ಮಾಡಬೇಕು. ಅವರಿಗೆ ನಗರಸಭಾ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿ ಕೊಡುವ ಬಗ್ಗೆಯೂ ಚಿಂತನೆ ನಡೆಸಬೇಕು’ ಎಂದರು.
ಸಭೆಯಲ್ಲಿ, ಚರಂಡಿ ಹೂಳೆತ್ತುವಿಕೆ ಸೇರಿದಂತೆ ವಿವಿಧ ಅಗತ್ಯ ಕಾಮಗಾರಿಗಳಿಗೆ ಘಟನೋತ್ತರ ಮಂಜೂರಾತಿ ನೀಡಲಾಯಿತು.
ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು ಇದ್ದರು.
ಪೌರಾಯುಕ್ತ ಮಧು ಎಸ್.ಎಂ ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.