
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಪುತ್ತೂರು: ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಬೆಳ್ಳಿಚಡವು ಎಂಬಲ್ಲಿ ಅ.22ರಂದು ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಲು ಕಾರ್ಯಾಚರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಪ್ರಸಾರ ಮಾಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳಿಗೆ ಸಂಬಂಧಿಸಿ ಖರೀದಿ ಮಾಡಿರುವ ರಶೀದಿಗಳೆಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ. ಈ ದಾಖಲೆಗಳ ಬಗ್ಗೆ ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಲ್ಲಿ ವಿಚಾರಿಸಿದಾಗ ಶುಕ್ರವಾರ ಮಾತ್ರ ಜಾನುವಾರು ಸಂತೆ ನಡೆಯುತ್ತದೆ ಎಂಬ ವಿಚಾರ ದೃಢಪಟ್ಟಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ರಶೀದಿ ನಕಲಿ ದಾಖಲೆಗಳೆಂದು ತಿಳಿದು ಬಂದಿದೆ. ಆರ್ಟಿಒ ಅಧಿಕಾರಿ ಮತ್ತು ಪಶು ವೈದ್ಯಾಧಿಕಾರಿಗಳು ಈ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲು ಅನುಮತಿ ನೀಡಿಲ್ಲ ಎಂಬ ಮಾಹಿತಿಯನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದು ಸುಳ್ಳು ದಾಖಲೆ ಎಂದು ತಿಳಿದಿದ್ದರೂ ಆರೋಪಿಗಳನ್ನು ರಕ್ಷಿಸುವ ದುರುದ್ದೇಶದಿಂದ ‘ಸ್ಟೇಟ್ ಆಫೀಸ್ ಎಸ್ಡಿಪಿಐ ಕರ್ನಾಟಕ’ ಹೆಸರಿನ ಎಕ್ಸ್ ಖಾತೆಯ ಖಾತೆದಾರರು, ‘ತೇಜಸ್ ನ್ಯೂಸ್ ಡಾಟ್ ಕಾಂ’ ಮಾಲೀಕ, ಸಂಪಾದಕ ಮತ್ತು ಸದಾತ್ ಬಜತ್ತೂರು ಹಾಗೂ ಇತರ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಸುದ್ದಿಯನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪದಡಿ ಸಂಪ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಪೋಸ್ಟ್ ಪ್ರಸಾರ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾಮಾಜಿಕ ಮಾಧ್ಯಮ ಬಳಕೆದಾರರು ಜವಾಬ್ದಾರಿಯುತವಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು ಎಂದು ದ.ಕ.ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.