ಜೈಲು (ಪ್ರಾತಿನಿಧಿಕ ಚಿತ್ರ)
ಪುತ್ತೂರು: ಕೆೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಇಲ್ಲಿನ ನ್ಯಾಯಾಲಯವು ತಾಲ್ಲೂಕಿನ ಮಾಡ್ನೂರು ಗ್ರಾಮದ ಮೊಹಮ್ಮದ್ ಸತ್ತಾರ್ ಎಂಬಾತನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಸುಳ್ಯದಿಂದ ಪುತ್ತೂರಿಗೆ 2022ರ ಏ. 25ರಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು, ‘ಪಕ್ಕದಲ್ಲಿ ಕುಳಿತಿದ್ದ ಮೊಹಮ್ಮದ್ ಸತ್ತಾರ್ ಕಿರುಕುಳ ನೀಡಿದ್ದ’ ಎಂದು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಆಗಿನ ಠಾಣಾಧಿಕಾರಿ ರಾಜೇಶ್ ಕೆ.ವಿ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಮೊಹಮ್ಮದ್ ಸತ್ತಾರ್ಗೆ 4 ತಿಂಗಳ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸಹಾಯಕ ಸರ್ಕಾರಿ ವಕೀಲರಾದ ಕವಿತಾ ಕೆ. ವಾದಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.