ಪುತ್ತೂರು: ಬಿಲ್ಲವ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹತ್ಯೆಯಿಂದಾಗಿ ಸಮುದಾಯಕ್ಕೆ ನಷ್ಟವಾಗಿದ್ದು, ಅವರ ಹತ್ಯೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಪುತ್ತೂರು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.
ಪುತ್ತೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ.ಸತೀಶ್ ಕುಮಾರ್ ಕೆಡೆಂಜಿ ಅವರು, ‘ಪ್ರವೀಣ್ ಹತ್ಯೆಗೆ ಸಂಬಂಧಿಸಿದ ನೈಜ ಆರೋಪಿಗಳನ್ನು ಹಾಗೂ ಈ ಹತ್ಯೆಯ ಹಿಂದೆ ಇರುವವರನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ನ್ಯಾಯ ಸಿಗದಿದ್ದರೆ ಮತ್ತು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಲ್ಲವ ಸಮಾಜ, ಸಂಘಟನೆ ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಸರ್ಕಾರ ಪ್ರವೀಣ್ ಕುಟುಂಬಕ್ಕೆ ₹ 1ಕೋಟಿ ಪರಿಹಾರ ನೀಡುವ ಜತೆಗೆ ಮನೆ ನಿರ್ಮಿಸಿ ಕೊಡಬೇಕು. ಜತೆಗೆ ವಿದ್ಯಾವಂತಳಾಗಿರುವ ಪ್ರವೀಣ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಆಗ್ರಹಿಸಿದರು.
ಬೆಳ್ಳಾರೆ ವ್ಯಾಪ್ತಿಯಲ್ಲಿ ನಡೆದ ಮಸೂದ್ ಹತ್ಯೆ ಪ್ರಕರಣದ ಬಗ್ಗೆ ಜನರಲ್ಲಿ ಮೂಡಿರುವ ಕೆಲವೊಂದು ಸಂದೇಹಗಳಿದ್ದು, ಅದನ್ನು ನಿವಾರಿಸುವ ಕೆಲಸವನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಮಾಡಬೇಕು ಎಂದು ಮನವಿ ಮಾಡಿದರು.
ಸಂಘದ ನಿಕಟಪೂರ್ವ ಅಧ್ಯಕ್ಷ ಜಯಂತ ನಡುಬೈಲು, ಮಾಜಿ ಅಧ್ಯಕ್ಷ ವಿಜಯ ಕುಮಾರ್ ಸೊರಕೆ, ಯುವವಾಹಿನಿ ಘಟಕದ ಕಾರ್ಯದರ್ಶಿ ಜಯರಾಮ್, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಚಂದ್ರಕಲಾ ಮುಕ್ವೆ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.