ಪುತ್ತೂರು: ಬೂತ್ಮಟ್ಟದಲ್ಲಿ ಮತಗಳ್ಳತನ ತಡೆಯುವ ಜವಾಬ್ದಾರಿ ಬೂತ್ ಮಟ್ಟದ ಏಜೆಂಟರ (ಬಿಎಲ್ಎ) ಮೇಲಿದ್ದು, ಈ ಸಂಬಂಧ ತರಬೇತಿ ಮಹತ್ವದ್ದಾಗಿದೆ. ಬಿಎಲ್ಎಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮತ ಕಳ್ಳತನ ತಡೆಯಲು ಸಾಧ್ಯ ಎಂದು ಕಾಂಗ್ರೆಸ್ನ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.
ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾ ಭವನದಲ್ಲಿ ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಭಾನುವಾರ ನಡೆದ ಬಿಎಲ್ಎ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವುದು, ಬೂತ್ನಿಂದ ಹೊರ ಹೋದವರು, ಬೋಗಸ್ ಮತದಾರರಿದ್ದರೆ ಡಿಲೀಟ್ ಮಾಡುವುದು ಬಿಎಲ್ಎ ಜವಾಬ್ದಾರಿ. ಸರಿಯಾದ ತರಬೇತಿ ಪಡೆದಾಗ ಮಾತ್ರ ಚುನಾವಣೆ ಪ್ರಕ್ರಿಯ ಸಮಪರ್ಕವಾಗಿ ಎದುರಿಸಲು, ವ್ಯವಸ್ಥಿತವಾಗಿ ಕೆಲಸ ಮಾಡಿದರೆ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿ, ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಾವು ಎಷ್ಟೇ ಅಭಿವೃದ್ಧಿ ಮಾಡಿದರೂ, ಗ್ಯಾರಂಟಿ ನೀಡಿದರೂ ತಲಮಟ್ಟದಲ್ಲಿ ಕೆಲಸ ಮಾಡದಿದ್ದರೆ ಗೆಲ್ಲಲು ಸಾಧ್ಯವಿಲ್ಲ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಚಿತ್ತರಂಜನ್ ಶೆಟ್ಟಿ, ಸದಸ್ಯ ಕೌಶಲ್ ಪ್ರಸಾದ್ ಶೆಟ್ಟಿ, ಪ್ರಚಾರ ಸಮಿತಿ ಸದಸ್ಯ ಶಶಿಕಿರಣ್ ರೈ ನೂಜಿಬೈಲು, ಜಿಲ್ಲಾ ಗ್ರಾಮಾಂತರ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಅಂಚನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶುಭೋದಯ ಆಳ್ವ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್, ಪ್ರಮುಖರಾದ ಅನಿತಾ ಹೇಮನಾಥ ಶೆಟ್ಟಿ, ಎಂ.ಬಿ ವಿಶ್ವನಾಥ ರೈ, ಎ.ಎಂ.ಪ್ರವೀಣಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಚಂದ್ರಪ್ರಭಾ ಗೌಡ, ಯು.ಟಿ ತೌಸೀಫ್ ಭಾಗವಹಸಿದ್ದರು.
ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ಪದ್ಮನಾಭ ಪೂಜಾರಿ ವಂದಿಸಿದರು. ಮಹಮ್ಮದ್ ಬಡಗನ್ನೂರು ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.