ADVERTISEMENT

ಶ್ರೀಮಂತ ದೇವಸ್ಥಾನಗಳಿಂದ C ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ: ರಾಮಲಿಂಗಾ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 14:05 IST
Last Updated 30 ಜೂನ್ 2025, 14:05 IST
ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಾತನಾಡಿದರು
ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಾತನಾಡಿದರು   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಂಥ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎ’, ‘ಬಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ, ‘ಸಿ’ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೆ  ಇರುವುದರಿಂದ ಅವುಗಳ ಅಭಿವೃದ್ಧಿಯನ್ನು ಶ್ರೀಮಂತ ದೇವಸ್ಥಾನಗಳ ವತಿಯಿಂದ ನಡೆಸಲು ಆದ್ಯತೆ ನೀಡಲಾಗುವುದು. ಕುಕ್ಕೆ ದೇವಸ್ಥಾನದ ವತಿಯಿಂದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಮೂರು ವರ್ಷದವರೆಗೆ ಪ್ರಾಧಿಕಾರ ಇಲ್ಲ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಎಲ್ಲ ರೀತಿಯ ಅಭಿವೃದ್ಧಿ ಕೆಲಸ ಮಾಡಲಾಗುವುದು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ಆಗಬೇಕೆಂಬ ಬೇಡಿಕೆ ಇದೆ. ಈಗ ಸಮಿತಿ ಇರುವುದರಿಂದ ಮುಂದಿನ ಮೂರು ವರ್ಷದವರೆಗೆ ಪ್ರಾಧಿಕಾರ ಮಾಡುವುದಿಲ್ಲ, ಆ ಬಳಿಕ ಯೋಚನೆ ಮಾಡೋಣ ಎಂದರು.

ADVERTISEMENT

ಜಿಲ್ಲೆಯ ಬಸ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಈ ಹಿಂದೆ ನಾಲ್ಕು ವರ್ಷ ಬಿಎಂಟಿಸಿಗೆ ಮಾತ್ರ ಬಸ್ ಖರೀದಿಸಲಾಗಿತ್ತು. ಈ ವರ್ಷ ಸುಮಾರು 800 ಬಸ್‌ಗಳು ಕೆಎಸ್ಆರ್‌ಟಿಸಿಗೆ ಬರಲಿವೆ. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆದ್ಯತೆ ನೀಡಲಾಗುವುದು. ಚಾಲಕರನ್ನು ನೇಮಕ ಮಾಡಲಾಗಿದ್ದು, 340 ಚಾಲಕರನ್ನು ಪುತ್ತೂರಿಗೆ ನೀಡಲಾಗಿದೆ. 200 ಚಾಲಕರನ್ನು ಮಂಗಳೂರಿಗೆ ನೀಡಲಾಗಿದೆ. ಬಳಿಕ ಚಾಮರಾಜನಗರ, ರಾಮನಗರ ವಿಭಾಗಕ್ಕೆ ನೀಡಲಾಗಿದೆ. 2000 ಚಾಲಕರಲ್ಲಿ ಒಂದು ಸಾವಿರ ಚಾಲಕರನ್ನು ಈ ನಾಲ್ಕು ವಿಭಾಗಕ್ಕೆ ನೀಡಲಾಗಿದೆ ಎಂದರು.

ಮಂಗಳೂರು ವಿಮಾನ ನಿಲ್ದಾಣದಿಂದ ಕುಕ್ಕೆಗೆ ಒಂದೆರಡು ತಿಂಗಳಲ್ಲಿ ಮೂರು ಬಸ್‌ ವ್ಯವಸ್ಥೆ ಮಾಡಲಾಗುವುದು. ಶಾಲಾ-ಕಾಲೇಜು ಮಕ್ಕಳಿಗೆ ಬಸ್ ನಿಲ್ಲಿಸದೆ ಇದ್ದರೆ ದೂರು ನೀಡಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೇಂದ್ರದ ‘ಪ್ರಸಾದ್‌’ ಯೋಜನೆಗೆ ರಾಜ್ಯದ 54 ದೇವಸ್ಥಾನಗಳ ಪಟ್ಟಿ ಕಳುಹಿಲಾಗಿದೆ. ಈ ಯೋಜನೆಯನ್ನು ದೇಶದಾದ್ಯಂತ ನಡೆಲಾಗುತ್ತಿದ್ದು, ಇದರಲ್ಲಿ ರಾಜ್ಯದ ನಾಲ್ಕು ದೇವಸ್ಥಾನಕ್ಕೆ ಅನುದಾನ ಬಂದಿದೆ. ಮೈಸೂರಿಗೆ ₹ 30 ಕೋಟಿ, ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ₹ 34 ಕೋಟಿ, ಇತರ ಎರಡು ದೇವಸ್ಥಾನಕ್ಕೆ ₹ 15 ಲಕ್ಷ ಬಂದಿದೆ ಎಂದರು.

ಕಡಬದಲ್ಲಿ ಬಸ್ ನಿಲ್ದಾಣಕ್ಕೆ ಗುರುತಿಸಲಾದ ಜಾಗಕ್ಕೆ ಸಂಪರ್ಕಿಸುವ ರಸ್ತೆಗೇ ಜಾಗ ಇಲ್ಲದೆ ಇದ್ದರೆ ಜಿಲ್ಲಾಧಿಕಾರಿ ಮೂಲಕ ಜಾಗ ಮಾಡಿಕೊಳ್ಳಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸೂಚಿಸಿದರು. ಸುಬ್ರಹ್ಮಣ್ಯಕ್ಕೆ ಕೆಎಸ್ಆರ್‌ಟಿಸಿ ಡಿಪೊ ಬೇಡಿಕೆ ಇದೆ. ಅದಕ್ಕೆ ಯೇನೆಕಲ್ಲಿನಲ್ಲಿ ಜಾಗ ಗುರುತಿಸಲಾಗಿದ್ದು, ಕಂದಾಯ ಸಚಿವರ ಮೂಲಕ ಪರಿಶೀಲನೆ ನಡೆಸಲಾಗುವುದು ಎಂದರು.

ಕುಕ್ಕೆಯಲ್ಲಿ 24 ಗಂಟೆ ಆರೋಗ್ಯ ಸೇವೆ ಭರವಸೆ: ಕುಕ್ಕೆಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಬೇಡಿಕೆ ಇದೆ. ದೇವಸ್ಥಾನದ ಆಸು-ಪಾಸಿನಲ್ಲಿ ಜಾಗ ನೀಡಿದರೆ 24 ಗಂಟೆ ಆರೋಗ್ಯ ಸೇವೆ ನೀಡುವ ಕೇಂದ್ರ ಮಾಡುತ್ತೇವೆ. ಈ ಬಗ್ಗೆ ಆರೋಗ್ಯ ಸಚಿವರಲ್ಲಿ ಚರ್ಚೆ ನಡೆಸಲಾಗುವುದು. ಸುಬ್ರಹ್ಮಣ್ಯ ಆಸ್ಪತ್ರೆಗೆ ವೈದ್ಯರ, ಸಿಬ್ಬಂದಿ ನೇಮಕದ ಬಗ್ಗೆಯೂ ಚರ್ಚೆ ನಡೆಸಲಾಗುವುದು‌ ಎಂದರು.

ಆದೇಶ ಪತ್ರ ಹಸ್ತಾಂತರ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಳಿಯ ಆದಿ ಸುಬ್ರಹ್ಮಣ್ಯ ರಸ್ತೆಯ ತುಳುಸಿತೋಟ ಎಂಬಲ್ಲಿ ದಾನಿ, ಮಾಜಿ ಸಚಿವ ಮಾಲೂರು ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರ ವತಿಯಿಂದ ನಿರ್ಮಾಣವಾಗಲಿರುವ ಆಶ್ಲೇಷ ಬಲಿ ಪೂಜಾ ಮಂದಿರದ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ದಾನಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಪತ್ರ ಹಸ್ತಾಂತರಿಸಿದರು. ಬಳಿಕ ದಾನಿಗಳನ್ನು ಗೌರವಿಸಿದರು.

ಆಶ್ಲೇಷ ಮಂದಿರಕ್ಕೆ ಶಂಕುಸ್ಥಾಪನೆ ಸಮಾರಂಭ ಎಂದು ಪೂಜೆ ಸೇರಿದಂತೆ ವಿವಿಧ ಸಿದ್ಧತೆ ನಡೆಸಲಾಗಿತ್ತು. ಆದರೆ, ಆಶ್ಲೇಷ ಬಲಿ ಪೂಜಾ ಮಂದಿರಕ್ಕೆ ಈ ಮೊದಲೇ ಶಂಕುಸ್ಥಾಪನೆ ನೆರವೇರಿಸಿದ್ದರಿಂದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ರದ್ದುಗೊಳಿಸಿ, ದಾನಿಗಳಿಗೆ ಆದೇಶ ಪತ್ರ ಹಸ್ತಾಂತರಿಸಿ, ದೇವರ ಪ್ರಸಾದ ನೀಡಿ ಗೌರವಿಸಲಾಯಿತು.

ರಾಮಲಿಂಗಾ ರೆಡ್ಡಿ ಅವರು ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಮಾಸ್ಟರ್ ಪ್ಲ್ಯಾನ್ ಸಭೆ ನಡೆಸಿದರು. ಸಭೆಯಲ್ಲಿ 3 ಹಂತದ ಮಾಸ್ಟರ್ ಪ್ಲ್ಯಾನ್ ಯೋಜನೆಯ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ದೇವಸ್ಥಾನದ ಸುತ್ತು ಪೌಳಿ, ಪಾರಂಪರಿಕ ಶೈಲಿಯ ರಥಬೀದಿ, 5ಸಾವಿರ ಮಂದಿಗೆ ಏಕ ಕಾಲದಲ್ಲಿ ಭೋಜನ ಪ್ರಸಾದ ವಿತರಿಸುವ ಕೊಠಡಿ, ವಸತಿ ಕಟ್ಟಡ, ಸಿಬ್ಬಂದಿ ವಸತಿ ಗೃಹ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯ ಬಳಿಕ ಸಚಿವರು ಇಂಜಾಡಿ, ಆದಿಸುಬ್ರಹ್ಮಣ್ಯ, ಹೊಸ ಆಶ್ಲೇಷ ಮಂದಿರ ನಿರ್ಮಾಣವಾಗಲಿರುವ ಸ್ಥಳ, ಎಸ್ಎಸ್‌ಪಿಯು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ವಿವಿಧ ಇಲಾಖೆ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಸ್ಟರ್ ಪ್ಲ್ಯಾನ್ ಸದಸ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.