ADVERTISEMENT

ತ್ಯಾಜ್ಯ ವಿಲೇವಾರಿಗೆ ಜಮೀನು ಕಾದಿರಿಸಿ: ಜಿಲ್ಲಾಧಿಕಾರಿ ಸೂಚನೆ

ಟಾಸ್ಕ್‌ಫೋರ್ಸ್‌ ಸಮಿತಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 1:31 IST
Last Updated 10 ಸೆಪ್ಟೆಂಬರ್ 2020, 1:31 IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿದರು.   

ಮಂಗಳೂರು: ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ, ಸೋಮೇಶ್ವರ, ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಜಮೀನು ಕಾದಿರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ಬುಧವಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿವಿಧ ಟಾಸ್ಕ್‌ಫೋರ್ಸ್ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನೆಲಭರ್ತಿ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಮಾಡಬೇಕಾಗಿದೆ. ಈ ಬಗ್ಗೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದರು.

ADVERTISEMENT

ಪಚ್ಚನಾಡಿ ಘಟಕದ ತ್ಯಾಜ್ಯ ವಿಲೇವಾರಿಯನ್ನು ಜೈವಿಕ ಮಾದರಿಯಲ್ಲಿ ನಿರ್ವಹಿಸಲು ಈಗಾಗಲೇ ಸಿದ್ಧತೆ ಮಾಡಲಾಗಿದೆ. ಕಳೆದ ವರ್ಷ ಪಚ್ಚನಾಡಿಯಲ್ಲಿ ನಡೆದ ದುರಂತದ ಪರಿಹಾರ ಒದಗಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುತ್ತಿದೆ ಎಂದು ಹೇಳಿದರು.

ನಗರ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಬಫರ್ ಝೋನ್ ಗುರುತಿಸಲು ನಗರ ಸ್ಥಳಿಯ ಸಂಸ್ಥೆ ಹಾಗೂ ನಗರ ಯೋಜನಾ ಪ್ರಾಧಿಕಾರಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯು ಸೂಚಿಸಬೇಕು. ಇಂತಹ ಪ್ರದೇಶಗಳಲ್ಲಿ ಯಾವುದೇ ಲೇಔಟ್ ಅಥವಾ ಮನೆ ನಿರ್ಮಾಣಕ್ಕೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಎ.ಜೆ. ಶಿಲ್ಪಾ, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಮಾಲಿನ್ಯ ನಿಯತ್ರಣ ಮಂಡಳಿ ಅಧಿಕಾರಿ ಕೀರ್ತಿ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.