ಮಂಗಳೂರು: ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಂ.ಎನ್.ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ನಡೆದ ಸಹಕಾರ ಮಾರಾಟ ಮಹಾಮಂಡಳದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಮಂಗಳೂರು ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರಿ ಸಂಘದ ಪ್ರತಿನಿಧಿಯಾಗಿ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಚುನಾವಣೆಗೆ ಸ್ಪರ್ಧಿಸಿದ್ದ ರಾಜೇಂದ್ರಕುಮಾರ್ ಅವಿರೋಧವಾಗಿ ಆಯ್ಕೆಗೊಂಡು, ಅಧ್ಯಕ್ಷರಾಗಿಯೂ ಪುನರಾಯ್ಕೆಗೊಂಡರು.
ಸಹಕಾರ ಮಾರಾಟ ಮಹಾ ಮಂಡಳದ ಇತಿಹಾಸದಲ್ಲಿ 1945ರ ನಂತರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊದಲ ಅಧ್ಯಕ್ಷರಾಗಿ 2017ರಲ್ಲಿ ಆಯ್ಕೆಗೊಂಡಿದ್ದ ರಾಜೇಂದ್ರ ಕುಮಾರ್, ಎರಡನೇ ಬಾರಿ ಆಯ್ಕೆಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಉಪಾಧ್ಯಕ್ಷರಾಗಿ ಶಿವಕುಮಾರಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಸುಮಾರು 28 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ.
ಕೃತಜ್ಞತೆ: ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹುದ್ದೆ ದೊರೆಯಲು ಕಾರಣರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೇಂದ್ರ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ , ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಚಿವರಾದ ಮುರುಗೇಶ್ ನಿರಾಣಿ , ಕೋಟ ಶ್ರೀನಿವಾಸ ಪೂಜಾರಿ,ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೇಂದ್ರಕುಮಾರ್ ಧನ್ಯವಾದ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.