
ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು
ಮಂಗಳೂರು: ರಾಜ್ಯ ಸರ್ಕಾರವು ಸ್ವ ಸಹಾಯ ಗುಂಪುಗಳಿಗೆ ಸಮುದಾಯ ಸುತ್ತುನಿಧಿ ಒದಗಿಸುವ ಮೂಲಕ ಮಹಿಳೆಯರ ಆರ್ಥಿಕ ಸಶಕ್ತೀಕರಣಕ್ಕೆ ನೆರವಾಗುತ್ತಿದೆ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಹೇಳಿದರು.
ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿರುವ ಎಂಟು ದಿನಗಳ ರಾಷ್ಟ್ರಮಟ್ಟದ 'ಸರಸ್ ಮೇಳ' ಸ್ವ–ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ರಾಜಧಾನಿಗೆ ಸೀಮಿತವಾಗಿದ್ದ ಮೇಳವನ್ನು ಬೇರೆ ಜಿಲ್ಲೆಗಳಲ್ಲೂ ನಡೆಸಬೇಕು ಎಂಬ ಉದ್ದೇಶದಿಂದ ಕಳೆದ ವರ್ಷ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಅವಕಾಶ ನೀಡಲಾಗಿದೆ ಎಂದರು.
ಗ್ರಾಮೀಣ ಜನರ ಜೀವನ ಮಟ್ಟ ಸುಧಾರಣೆ ಆಗಬೇಕಾದರೆ ಮಹಿಳಾ ಸಬಲೀಕರಣ ಮೊದಲು ಆಗಬೇಕು. ಈ ಪರಿಕಲ್ಪನೆಯಲ್ಲಿ ರಚನೆ ಯಾಗಿರುವ ಸ್ವ ಸಹಾಯ ಸಂಘಗಳಿಗೆ ಅನುಕೂಲವಾಗುವ ಸಾಕಷ್ಟು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸಮುದಾಯ ಸುತ್ತು ನಿಧಿ ಅಡಿಯಲ್ಲಿ ರಾಜ್ಯದ ಸುಮಾರು 5 ಸಾವಿರ ಸ್ವ ಸಹಾಯ ಗುಂಪುಗಳಿಗೆ ನೆರವು ನೀಡಲಾಗುತ್ತಿದೆ. ಸಮುದಾಯ ಸುತ್ತುನಿಧಿಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಅಂದಾಜು ₹70 ಕೋಟಿ ನೆರವು ನೀಡಲಾಗಿದೆ ಎಂದರು.
ಸ್ಪೀಕರ್ ಯು.ಟಿ. ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.
ಅಸ್ಸಾಂ, ತೆಲಂಗಾಣ, ಆಂಧ್ರಪ್ರದೇಶ, ಒಡಿಶಾ ಸೇರಿದಂತೆ 16 ರಾಜ್ಯಗಳ ಸ್ವ ಸಹಾಯ ಸಂಘಗಳು, ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳ ಸ್ವ ಸಹಾಯ ಗುಂಪುಗಳ ಮಹಿಳೆಯರು ಮೇಳದಲ್ಲಿ ಭಾಗವಹಿಸಿದ್ದಾರೆ. 120ಕ್ಕೂ ಹೆಚ್ಚು ಮಳಿಗೆಗಳು, 30ಕ್ಕೂ ಅಧಿಕ ಆಹಾರ ಮಳಿಗೆಗಳು ಮೇಳದಲ್ಲಿವೆ
ಫೆ. 28 ರವರೆಗೆ ಮೇಳ ನಡೆಯಲಿದೆ.
ಅಕ್ಕ ಕೆಫೆಯ ಮಹಿಳೆಯರು ಸ್ಥಳದಲ್ಲೇ ವಿವಿಧ ಬಗೆಯ ತಿನಿಸುಗಳನ್ನು ತಯಾರಿಸಿ ಕೊಡುತ್ತಿದ್ದು, ಗ್ರಾಹಕರು ಖುಷಿಯಿಂದ ಖರೀದಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.