ಮಂಗಳೂರು: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಗೆ ನಿವೃತ್ತ ಸೈನಿಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಎಸ್ಡಿಆರ್ಎಫ್ ಮತ್ತು ತರಬೇತಿ ವಿಭಾಗದ ಉಪ ನಿರ್ದೇಶಕ ಯೂನುಸ್ ಅಲಿ ಕೌಸರ್ ಹೇಳಿದರು.
ನಗರದ ಪಾಂಡೇಶ್ವರದಲ್ಲಿರುವ ಅಗ್ನಿಶಾಮಕ ಠಾಣೆಗೆ ಬುಧವಾರ ಭೇಟಿ ನೀಡಿ, ಎಸ್ಡಿಆರ್ಎಫ್ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಕಲಬುರ್ಗಿಗಳಲ್ಲಿ ಎಸ್ಡಿಆರ್ಎಫ್ ತಂಡಗಳಿವೆ. ದಾವಣಗೆರೆ ಹಾಗೂ ಮೈಸೂರಿನಲ್ಲೂ ಎಸ್ಡಿ
ಆರ್ಎಫ್ ಘಟಕಗಳನ್ನು ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ವಿಪತ್ತು ನಿರ್ವಹಣೆಯ ಸಂದರ್ಭದಲ್ಲಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ ಎಫ್ಗಳ ಅಗತ್ಯವಿದೆ ಎಂದು ತಿಳಿಸಿದರು.
ವಿಪತ್ತು ನಿರ್ವಹಣೆಗಾಗಿ 2012 ರಲ್ಲಿ ಎಸ್ಡಿಆರ್ಎಫ್ ಘಟಕವನ್ನು ಆರಂಭಿಸಲಾಗಿದೆ. ಇದರಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮೇಲಿದ್ದ ಒತ್ತಡವನ್ನು ಕಡಿಮೆ ಮಾಡಿದಂತಾಗಿದೆ ಎಂದರು.
ಎಸ್ಡಿಆರ್ಎಫ್ಗೆ ಕೆಎಸ್ಆರ್ಪಿ ಮತ್ತು ಆಂತರಿಕ ಭದ್ರತಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸುವುದು ಅಗತ್ಯವಾಗಿದೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆ, ಗೃಹ ರಕ್ಷಕ ದಳ ಹಾಗೂ ಪೌರ ರಕ್ಷಣಾ ಪಡೆಯ ತಲಾ 25 ಜನರನ್ನು ಎಸ್ಡಿಆರ್ಎಫ್ಗೆ ನಿಯೋಜಿಸಲಾಗಿದೆ. ಮಂಗಳೂರಿನಲ್ಲಿ ನಿಯೋಜನೆಗೊಂಡ 25 ಜನರಿಗೆ ತರಬೇತಿಯನ್ನೂ ನೀಡಲಾಗಿದೆ ಎಂದು ಯುನೂಸ್ ಅಲಿ ಕೌಸರ್ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.