ಮಂಗಳೂರು: ಮನೆ ತೆರಿಗೆ ಸೇರಿದಂತೆ ಯಾವುದೇ ಸರ್ಕಾರಿ ಪಾವತಿಗಳನ್ನು ಬದ್ಧತೆ ಮತ್ತು ಪ್ರಾಮಾಣಿಕವಾಗಿ ಪಾವತಿಸುವ ದಕ್ಷಿಣ ಕನ್ನಡ ಜಿಲ್ಲೆಯ ಜನರ ಮನೋಭಾವ ಶ್ಲಾಘನೀಯ ಎಂದು ಜಿ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ಆನಂದ್ ಕೆ ಹೇಳಿದರು.
ಶುಕ್ರವಾರ ಇಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ತೆರಿಗೆ ಸಂಗ್ರಹದಲ್ಲಿ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಸರ್ಕಾರಿ ನೌಕರರಿಗೆ ಉತ್ತಮವಾಗಿ ಕೆಲಸ ಮಾಡುವ ವಾತಾವರಣ ಜಿಲ್ಲೆಯಲ್ಲಿ ಇದೆ. ಹಲವು ಇಲಾಖೆಗಳಲ್ಲಿ ಸಾಕಷ್ಟು ಸಿಬ್ಬಂದಿ ಕೊರತೆಯ ಮಧ್ಯೆಯೂ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯುತ್ತಿದೆ ಎಂದರು.
ಸರ್ಕಾರಿ ಕಚೇರಿಗೆ ಬರುವ ಸಾರ್ವಜನಿಕರ ಕೆಲಸವನ್ನು ತ್ವರಿತವಾಗಿ ಮಾಡಿಕೊಡುವುದು ಮತ್ತು ಅವರಿಗೆ ನಿಯಮದ ಬಗ್ಗೆ ಸರಳವಾಗಿ ತಿಳಿಸಿಕೊಡುವುದು ನೌಕರರ ಆದ್ಯತೆಯಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿರುವ ವಿನಾಯಕ್ ನರ್ವಾಡೆ ಎಲ್ಲರ ಸಹಕಾರ ಕೋರಿದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಡಿಸಿಪಿ ಮಿಥುನ್ ಎಚ್.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ, ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್, ಜಿ.ಪಂ. ಯೋಜನಾ ನಿರ್ದೇಶಕ ಜಯರಾಮ್, ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ಇದ್ದರು.
ಜಿ.ಪಂ. ಯೋಜನಾಧಿಕಾರಿ ಸಂಧ್ಯಾ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಮಹೇಶ್ ನಿರೂಪಿಸಿದರು. ಶಕುಂತಲಾ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.