ADVERTISEMENT

ಮಕ್ಕಳ ಹಬ್ಬ ರಾಜಕೀಯ ಪ್ರೇರಿತ: ಎಸ್ಎಫ್ಐ ಆರೋಪ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 14:39 IST
Last Updated 16 ನವೆಂಬರ್ 2022, 14:39 IST

ಮಂಗಳೂರು: ‘ಕೇಶವ ಸ್ಮೃತಿ ಸಂವರ್ಧನಾ ಸಮಿತಿಯ ಆಶ್ರಯದಲ್ಲಿ ಇದೇ 19 ಮತ್ತು 20ರಂದು ನಗರದ ಸಂಘನಿಕೇತನದಲ್ಲಿ ಆಯೋಜಿಸಲಾದ ಮಕ್ಕಳ ಹಬ್ಬವು ರಾಜಕೀಯ ದುರುದ್ದೇಶದ ಕಾರ್ಯಕ್ರಮ’ ಎಂದುಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ ) ಆರೋಪಿಸಿದೆ.

‘ಆತ್ಮವಿಶ್ವಾಸ, ಕಲೆ, ಸಾಹಿತ್ಯ, ಸಂಸ್ಕೃತಿಗಳ ಹೆಸರಿನಲ್ಲಿ ನಡೆಯುವ ಈ ಕಾರ್ಯಕ್ರಮದ ಹಿಂದೆ ರಾಜಕೀಯ ದುರುದ್ದೇಶವಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೋಡಿಕೊಳ್ಳಬೇಕು. ಪೋಷಕರೂ ತಮ್ಮ ಮಕ್ಕಳನ್ನು ಈ ಕಾರ್ಯಕ್ರಮಕ್ಕೆ ಕಳುಹಿಸದೇ ಬಹಿಷ್ಕರಿಸಬೇಕು’ ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.

’ಈ ಕಾರ್ಯಕ್ರಮದ ಆಯೋಜಕರು ಮತ್ತು ಸಂಪನ್ಮೂಲ ವ್ಯಕ್ತಿಗಳೆಲ್ಲರೂ ಸಂಘ ಪರಿವಾರದ ಸಂಘಟನೆಗಳಲ್ಲಿ ಗುರುತಿಸಿಕೊಂಡವರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಸಂವಾದ ನಡೆಸಲಿರುವ ರೋಹಿತ್ ಚಕ್ರತೀರ್ಥ, ಚಕ್ರವರ್ತಿ ಸೂಲಿಬೆಲೆ, ಕಲ್ಲಡ್ಕ ಪ್ರಭಾಕರ್ ಭಟ್ ಜಾತ್ಯಾತೀತ ಆಶಯಗಳಿಗೆ ವಿರುದ್ಧವಾದ ಸಿದ್ಧಾಂತ ಪ್ರತಿಪಾದಿಸುವವರು’ ಎಂದು ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ವಿನಿತ್ ದೇವಾಡಿಗ ಆರೋಪಿಸಿದ್ದಾರೆ.

ADVERTISEMENT

‘ಕನ್ನಡ ಮಾಧ್ಯಮದ ಶಾಲೆಗಳ ವಿದ್ಯಾರ್ಥಿಗಳಿಗಾಗಿಯೇ ಕಾರ್ಯಕ್ರಮ ಆಯೋಜಿಸಿದ್ದಾರೆ. ಈ ಶಾಲೆಗಳಲ್ಲಿ ಹಿಂದುಳಿದ ಜಾತಿ ಮತ್ತು ವರ್ಗಗಳ ಮಕ್ಕಳೇ ಹೆಚ್ಚಾಗಿ ಕಲಿಯುತ್ತಿದ್ದು, ಅವರನ್ನು ರಾಜಕೀಯ ದುರುದ್ದೇಶಕ್ಕೆ ಬಳಸುವ ಹುನ್ನಾರ ಇದರ ಹಿಂದಿದೆ’ ಎಂದು ಎಸ್ಎಫ್ಐ ಜಿಲ್ಲಾ ಘಟಕದ ಕಾರ್ಯದರ್ಶಿ ರೇವಂತ್ ಕದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.