ಮಂಗಳೂರು: ಕೋವಿಡ್ ಲಾಕ್ಡೌನ್ ಮತ್ತು ಉದ್ಯೋಗ ನಷ್ಟದಿಂದ ಗಲ್ಫ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 179 ಜನರು ವಂದೇ ಭಾರತ್ ಮಿಷನ್ ಅಡಿಯಲ್ಲಿ ನಿಯೋಜಿಸಿದ್ದ ವಿಮಾನದಲ್ಲಿ ಬುಧವಾರ ರಾತ್ರಿ ಮಂಗಳೂರು ತಲುಪಿದ್ದಾರೆ.
176 ಮಂದಿ ವಯಸ್ಕರು ಮತ್ತು ಮೂವರು ಮಕ್ಕಳನ್ನು ಹೊತ್ತು ಶಾರ್ಜಾದಿಂದ ಹೊರಟಿದ್ದ ಇಂಡಿಯನ್ ಏರ್ಲೈನ್ಸ್ ವಿಮಾನ ರಾತ್ರಿ 8 ಗಂಟೆ ಸುಮಾರಿಗೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಈ ವಿಮಾನದಲ್ಲಿ ಬಂದವರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆಯೇ ಎಲ್ಲರನ್ನೂ ಪ್ರಾಥಮಿಕ ಹಂತದ ತಪಾಸಣೆಗೆ ಒಳಪಡಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳ ನಿವಾಸಿಗಳನ್ನು ಮಂಗಳೂರು ನಗರದಲ್ಲೇ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಉಡುಪಿ ಜಿಲ್ಲೆಯ ನಿವಾಸಿಗಳು ಬಸ್ ಮೂಲಕ ಉಡುಪಿಗೆ ತೆರಳಿದ್ದು, ಅಲ್ಲಿಯೇ ಸಾಂಸ್ಥಿಕ ಕ್ವಾರಂಟೈನ್ ಪೂರೈಸುತ್ತಾರೆ ಎಂದು ಅಂತರರಾಷ್ಟ್ರೀಯ ಪ್ರಯಾಣಿಕರ ಕ್ವಾರಂಟೈನ್ ಉಸ್ತುವಾರಿಯಾಗಿರುವ ಪುತ್ತೂರು ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದರು.
ಎಲ್ಲ ಪ್ರಯಾಣಿಕರ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಗುರುವಾರದಿಂದ ಈ ಪ್ರಕ್ರಿಯೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.