ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸೋಮವಾರ ಕೊಪ್ಪರಿಗೆ ಇಳಿಸುವ ಕಾರ್ಯ ಸಂಭ್ರಮದಿಂದ ನಡೆಯಿತು. ಇದರೊಂದಿಗೆ ದೇವಸ್ಥಾನದ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರುಮುಂಜಾನೆ ವೈದಿಕ ವಿಧಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.
ಎಲ್ಲಾ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭ. ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿ.
ವಿಶಿಷ್ಠ ಉತ್ಸವ: ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣದಲ್ಲಿ ಬೆಳಿಗ್ಗೆಯಿಂದ ನೀರು ತುಂಬಿಸಲಾಯಿತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನೆರವೇರಿತು. ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನೀರಿನಲ್ಲೇ ನಡೆಯಿತು. ಈ ಉತ್ಸವ ಬೇರೆ ಯಾವ ದೇವಳದಲ್ಲೂ ಇಲ್ಲ. ಇಲ್ಲಿವರ್ಷದಲ್ಲಿ ಒಮ್ಮೆ ಮಾತ್ರ ನಡೆಯುತ್ತದೆ. ಇದರೊಂದಿಗೆ ಚಂಪಾಷಷ್ಠಿ ಉತ್ಸವ ಸಮಾಪ್ತಿಯಾದವು.
ದೇವಳದ ಆನೆ ಯಶಸ್ವಿ ನೀರು ತುಂಬಿದಹೊರಾಂಗಣದಲ್ಲಿ ಸಂಭ್ರಮಿಸಿತು. ನೀರಿನಲ್ಲಿ ತೇಲಾಡಿ ತನ್ನ ಮೇಲೆ ನೀರು ಹಾರಿಸಿದ ಪುಟಾಣಿಗಳ ಮೇಲೆ ನೀರು ಎರಚಿ ಖುಷಿಪಟ್ಟಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಪ್ರಸನ್ನ ದರ್ಬೆ, ಪಿಜಿಎಸ್ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡುಕಜೆ, ಎಇಒ ಪುಷ್ಪಲತಾ ರಾವ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಮನೋಜ್ ಸುಬ್ರಹ್ಮಣ್ಯ, ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ಮರ್ಧಾಳ, ಚಂದ್ರಶೇಖರ ನಲ್ಲೂರಾಯ, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಎಂಜಿನಿಯರ್ ಉದಯ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.