
ಮಂಗಳೂರು: ಏಕ ನಿವೇಶನ (ಸಿಂಗಲ್ ಸೈಟ್) ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದರು.
ಉಳ್ಳಾಲ ತಾಲ್ಲೂಕಿನ 9/11 ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಇಲ್ಲಿ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
9/11 ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲ ಇಟ್ಟುಕೊಳ್ಳುತ್ತಿರುವ ಬಗ್ಗೆ ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬರುತ್ತಿವೆ. ಏಕ ನಿವೇಶನಕ್ಕೆ ಸಂಪರ್ಕ ರಸ್ತೆಯ ಬಗ್ಗೆ ಸ್ಪಷ್ಟವಾದ ತಿಳಿವಳಿಕೆ ಇರಬೇಕು. ಸರ್ಕಾರಿ ರಸ್ತೆ ಅಥವಾ ಖಾಸಗಿ ರಸ್ತೆಗಳ ಬಗ್ಗೆ ಸರಿಯಾದ ಮಾಹಿತಿ ನಮೂದಿಸಬೇಕು ಎಂದರು.
ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ದೀಪಾ ಚೋಳನ್ ಮಾತನಾಡಿ, ಏಕನಿವೇಶನ ಅರ್ಜಿಗಳಲ್ಲಿ ರಸ್ತೆ ಬಗ್ಗೆ ಅಫಿಡಾವಿಟ್ ಪಡೆದು 9/11 ನೀಡುವ ಬಗ್ಗೆ ಶೀಘ್ರ ಸುತ್ತೋಲೆ ಹೊರಡಿಸಲಾಗುವುದು. 9/11 ಅರ್ಜಿಗಾಗಿ ಪದೇ ಪದೇ ವಿವಿಧ ಕಚೇರಿಗೆ ತೆರಳುವ ಬದಲು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಒಂದು ಸಲ ಅನುಮೋದನೆ ನೀಡಿದ ಬಳಿಕ ಸಂಬಂಧಿಸಿದ ಗ್ರಾಮ ಪಂಚಾಯಿತಿಗೆ ಕಳುಹಿಸಿಕೊಡಲಾಗುವುದು. ಇದರಿಂದ 2ನೇ ಬಾರಿ ಮೂಡ ಅಥವಾ ನಗರ ಯೋಜನಾ ಸಮಿತಿಗೆ ಬರುವ ಅಗತ್ಯ ಇರುವುದಿಲ್ಲ ಎಂದರು.
ರಸ್ತೆ ವಿಸ್ತರಣೆ ಉದ್ದೇಶವಿದ್ದರೆ ಅದನ್ನು 9/11ರಲ್ಲಿ ನಮೂದಿಸಲಾಗುವುದು. ಗುಡ್ಡಗಾಡು ಪ್ರದೇಶದಲ್ಲಿ 3.65 ಮೀ. ಅಗಲದ ರಸ್ತೆಗೆ ಅವಕಾಶವಿದ್ದು, ಇದನ್ನು ಕರಾವಳಿ ಮತ್ತು ಮಲೆನಾಡಿಗೆ ಅನ್ವಯಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
9/11 ನಿಯಮಗಳಲ್ಲಿ ಗೊಂದಲ ತಪ್ಪಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಲಾಗುವುದು. ಸ್ಥಳೀಯ ಮಟ್ಟದ ಅಧಿಕಾರಿಗಳು ತ್ವರಿತವಾಗಿ 9/11 ಹಾಗೂ ಏಕನಿವೇಶನ ಅನುಮೋದನೆ ನೀಡಲು ಒಂದು ವಾರದಲ್ಲಿ ಸುತ್ತೋಲೆ ಹೊರಡಿಸಲಾಗುವುದು ಎಂದರು.
94ಸಿ ಅಡಿ ಮಂಜೂರಾದ ನಿವೇಶನಗಳಲ್ಲಿ ಮನೆ ಕಟ್ಟಲು 9/11 ದಾಖಲೆಗಳನ್ನು 15 ದಿನದೊಳಗೆ ನೀಡಲು ಆನ್ಲೈನ್ನಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ನಾಗರಿಕರು ನೇರವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ವಿಧಾನಸಭಾಧ್ಯಕ್ಷರು ಮಾತನಾಡಿ, ಭವಿಷ್ಯದ ಹಿತ ದೃಷ್ಟಿಯಿಂದ ಬಡಾವಣೆಗಳಲ್ಲಿ ಆಟದ ಮೈದಾನ, ಉದ್ಯಾನ ಹಾಗೂ ನಾಗರಿಕ ಸೌಲಭ್ಯದ ನಿವೇಶನಗಳು ಅಗತ್ಯವಾಗಿವೆ. ಅವೈಜ್ಞಾನಿಕ ಕಟ್ಟಡ ನಿರ್ಮಾಣದಿಂದ ಸಮಸ್ಯೆಗಳು ಹೆಚ್ಚುತ್ತವೆ. ಇದರ ಅನುಷ್ಠಾನದ ವೇಳೆ ಸಾರ್ವಜನಿಕರಿಗೆ ತೊಂದರೆ ನೀಡುವುದನ್ನು ಸಹಿಸುವುದಿಲ್ಲ ಎಂದರು.
ನಗರ ಯೋಜನಾ ಆಯುಕ್ತ ವೆಂಕಟಾಚಲ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನಾಯಕ್ ನರ್ವಾಡೆ ಉಪಸ್ಥಿತರಿದ್ದರು.
ಇನ್ನು ಮುಂದೆ ಪ್ರತಿ ತಿಂಗಳು ಒಂದು ತಾಲ್ಲೂಕಿನಲ್ಲಿ ಅದಾಲತ್ ನಡೆಸಿ ಏಕ ನಿವೇಶನ ಮತ್ತು 9/11 ಸಾರ್ವಜನಿಕ ಅರ್ಜಿಯನ್ನು ಇತ್ಯರ್ಥ ಪಡಿಸಲಾಗುವುದು.– ದೀಪಾ ಚೋಳನ್, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.