
ಸಾಕ್ಷಿ ದೂರುದಾರ
ಮಂಗಳೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಸಾಕ್ಷಿ ದೂರುದಾರನ ಹಣಕಾಸಿನ ವ್ಯವಹಾರ, ಆದಾಯದ ಮೂಲಗಳ ವಿಚಾರಣೆ ತುಸು ವಿಳಂಬವಾಗಿದೆ. ಹಬ್ಬಗಳು ಎದುರಾಗಿರುವುದು ಇದಕ್ಕೆ ಕಾರಣ’ ಎಂದು ಎಸ್ ಐಟಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇಲ್ಲಿಯವರೆಗೆ, ಎಸ್ಐಟಿ ತಂಡವು ಮಹೇಶ್ ಶೆಟ್ಟಿ ತಿಮರೋಡಿ ಜೊತೆ ನಿಕಟ ಸಂಪರ್ಕ ಹೊಂದಿರುವ 11 ವ್ಯಕ್ತಿಗಳ ವಿಚಾರಣೆ ನಡೆಸಲು ಯೋಜಿಸಿತ್ತು. ಆದರೆ, ಹಲವರು ವಿಚಾರಣೆ ಹಾಜರಾಗದೇ ಬೇರೆ
ಬೇರೆ ಕಾರಣಗಳನ್ನು ಮುಂದಿಡುತ್ತಿದ್ದಾರೆ. ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದ ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಾಕ್ಷಿ ದೂರುದಾರನ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಸೆ.27ರಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ಉಡುಪಿಗೆ ಭೇಟಿ ನೀಡಿದ್ದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಈ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ‘ಧರ್ಮಸ್ಥಳದ ಬಗ್ಗೆ ನಮಗೆ ಅಪಾರ ಗೌರವವಿದೆ. ಏನೇ ಇರಲಿ ಸತ್ಯ ಸಂಗತಿ ಹೊರಬರಬೇಕು. ಅದಕ್ಕಾಗಿಯೇ ಎಸ್ಐಟಿ ರಚಿಸಲಾಗಿದ್ದು, ರಚನೆ ಅಗತ್ಯವೇ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಸ್ಐಟಿ ವರದಿ ಸಲ್ಲಿಸಿದ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.