ಮಂಗಳೂರು: ಸರ್ಕಾರದ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲಾಗಿರುವ ಶೇಖಡ 2ರಷ್ಟು ಉದ್ಯೋಗಾವಕಾಶ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಆಗ್ರಹಿಸಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಬೇಧ ಭಾವ ಸಮಾನತೆಯನ್ನು ಪ್ರತಿಪಾದಿಸಲು ಕ್ರೀಡೆಯಲ್ಲಿ ಅವಕಾಶವಿದೆ ಎಂದರು.
ಸ್ಪರ್ಧೆಗಳಿಗೆ ಚಾಲನೆ ನೀಡಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಕ್ರೀಡಾಸಾಧಕರಿಗೆ ಇಲಾಖೆಗಳಲ್ಲಿ ಇರುವ ಮೀಸಲಾತಿ ಸದ್ಬಳಕೆಯಾಗಬೇಕು ಎಂದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿಸೋಜ ಸೆ.13 ಮತ್ತು 14ರಂದು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದ್ದು 22ರಿಂದ 25ರ ವರೆಗೆ ಮೈಸೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದರು.
ಹ್ಯಾಂಡ್ಬಾಲ್ ಸಂಸ್ಥೆಯ ಅಧ್ಯಕ್ಷ ಧನರಾಜ್, ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಡಿ.ಎಂ ಅಸ್ಲಾಂ, ಪವರ್ಲಿಫ್ಟಿಂಗ್ ಸಂಸ್ಥೆ ಅಧ್ಯಕ್ಷ ಉಮೇಶ್, ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಕಬಡ್ಡಿ ಸಂಸ್ಥೆಯ ಕಾರ್ಯದರ್ಶಿ ರತನ್ ಶೆಟ್ಟಿ, ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಶಂಕರ್ ಶೆಟ್ಟಿ, ಮಂಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.