ADVERTISEMENT

ಇಲಾಖೆಗಳು ಸಮನ್ವಯದಿಂದ ಪರೀಕ್ಷೆ ನಡೆಸಿ: ಶಾಸಕ ಸಂಜೀವ ಮಠಂದೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 3:47 IST
Last Updated 15 ಜುಲೈ 2021, 3:47 IST
ಪುತ್ತೂರಿನಲ್ಲಿ ಮಂಗಳವಾರ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ನಡೆಯಿತು.
ಪುತ್ತೂರಿನಲ್ಲಿ ಮಂಗಳವಾರ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ನಡೆಯಿತು.   

ಪುತ್ತೂರು: ಕೋವಿಡ್ ಭೀತಿಯ ಮಧ್ಯೆ ಕಳೆದ ವರ್ಷದಂತೆ ಈ ವರ್ಷವೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು ಮಕ್ಕಳ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಎಲ್ಲ ಇಲಾಖೆಗಳನ್ನು ಸೇರಿಸಿಕೊಂಡು ಯಶಸ್ವಿಯಾಗಿ ಪರೀಕ್ಷೆ ನಡೆಸಬೇಕು ಎಂದು ಶಾಸಕ ಸಂಜೀವ ಮಠಂದೂರು ಸೂಚಿಸಿದರು.

ಮಂಗಳವಾರ ಇಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಿಗೆ ಅವಶ್ಯ ಇರುವ ಮೂಲ ಸೌಲಭ್ಯಗಳನ್ನು ಇಲಾಖೆ, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಮೂಲಕ ಒದಗಿಸಬೇಕು. ಶೇ 100ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕ್ರಮಕೈಗೊಳ್ಳಬೇಕು ಎಂದರು.

ಮಕ್ಕಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಮನೆ ಹಿಂತಿರುಗುವ ಸಂದರ್ಭದಲ್ಲಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಬೇಕು. ಎಲ್ಲ ಮಾರ್ಗಗಳಲ್ಲಿ ಬಸ್ ಓಡಿಸುವ ಜತೆಗೆ ಕುಂಟಾರು, ಮೇನಾಲ, ಪಾಣಾಜೆ ಮೊದಲಾದ ಗಡಿ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದರು.

ADVERTISEMENT

ಬಹುತೇಕ ಸಿದ್ಧತೆ ಪೂರ್ಣ: ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಮಾತನಾಡಿ, ‘ಪರೀಕ್ಷೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು 10 ವಾಹನಗಳನ್ನು ಒದಗಿಸಬೇಕು’ ಎಂದು ಮನವಿ ಮಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಮಾತನಾಡಿ, ‘ಪುತ್ತೂರು ಹಾಗೂ ಕಡಬ ತಾಲ್ಲೂಕುಗಳ ಒಟ್ಟು 25 ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ನೇಮಿಸಲಾಗುವುದು. ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಲ್ಲಿ ಅಂತಹ ಮಕ್ಕಳಿಗೆ ಬಲ್ನಾಡು ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು’ ಎಂದರು.

ಪೌರಾಯುಕ್ತ ಮಧು ಎಸ್.ಮನೋಹರ್ ಇದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ ಸ್ವಾಗತಿಸಿದರು. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.