ಮಂಗಳೂರು: ನಗರದ ಸೇಂಟ್ ಅಲೋಶಿಯಸ್ ಕಾಲೇಜು ಮತ್ತು ಶಾರದಾ ವಿದ್ಯಾಲಯದ ತಂಡಗಳು ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಚೆಸ್ ಟೂರ್ನಿಯಲ್ಲಿ ಕ್ರಮವಾಗಿ ಕಾಲೇಜು ವಿದ್ಯಾರ್ಥಿಗಳ ಮತ್ತು ವಿದ್ಯಾರ್ಥಿನಿಯರ ವಿಭಾಗದಲ್ಲಿ ಚಾಂಪಿಯನ್ ಆದವು.
ಕೊಂಚಾಡಿಯ ಬೋಸ್ಕೋಸ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಎರಡೂ ವಿಭಾಗಗಳಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು ರನ್ನರ್ ಅಪ್ ಆಯಿತು.
ವೈಯಕ್ತಿಕ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್, ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಣವ್ ಪಿ.ಜಿ, ಸೇಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಆನ್ಸಿಲ್ ಪಿಂಟೊ, ಅಂಬಿಕಾ ಪದವಿಪೂರ್ವ ಕಾಲೇಜಿನ ತ್ರಿಶೂಲ್ ಎನ್.ಡಿ ಹಾಗೂ ಕೆನರಾ ಪದವಿಪೂರ್ವ ಕಾಲೇಜಿನ ಸತ್ಯಪ್ರಸಾದ್ ಹೆಬ್ಬಾರ್ ಕ್ರಮವಾಗಿ ಮೊದಲ ಐದು ಸ್ಥಾನಗಳನ್ನು ಗೆದ್ದುಕೊಂಡರು.
ವಿದ್ಯಾರ್ಥಿನಿಯರ ವಿಭಾಗದಲ್ಲಿ ಶಾರದಾ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೀತಿಕಾ ಕೆ, ಸೇಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಶ್ರೀಕಾ ಎಸ್ ಹೆಗ್ಡೆ, ಶಾರದಾ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಮೇಧಾ ಜಿ.ಭಟ್, ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವರ್ಷಿಣಿ ಎ.ಪಿ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಂಧ್ಯಾ ಪ್ರಭು ಕ್ರಮವಾಗಿ ಮೊದಲ ಐದು ಸ್ಥಾನಗಳನ್ನು ಗೆದ್ದುಕೊಂಡರು.
ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಸಂಸ್ಥೆಯ ಅಧ್ಯಕ್ಷ ರಮೇಶ್ ಕೋಟೆ ಸ್ಪರ್ಧೆಯನ್ನು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಗೌರವಾಧ್ಯಾಕ್ಷ ಸುಧಾಕರ ಶೆಟ್ಟಿ, ಬೋಸ್ಕೋಸ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎಸ್. ಬೋಸ್ಕೊ ಇದ್ದರು. ಬೋಸ್ಕೋಸ್ ಕಾಲೇಜಿನ ಪ್ರಾಂಶುಪಾಲೆ ವಿಜಯ ಕುಮಾರಿ ಸ್ವಾಗತಿಸಿದರು. ಸ್ಮಿತಾ ಎಂ ನಿರೂಪಿಸಿದರು. ವಾರುಣಿ ಸುರೇಶ್ ಪ್ರಾರ್ಥಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.