ಮಂಗಳೂರು: ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿರಾಜ್ ಮೋಹನ್ ಉಣ್ಣಿತ್ತಾನ್ ಗೆಲುವಿನ ಸಂಭ್ರಮದಲ್ಲಿ ವಿಜಯೋತ್ಸವ ಆಚರಣೆ ವೇಳೆ ಶನಿವಾರ ಸಂಜೆ ತಲಪಾಡಿ ಟೋಲ್ ಗೇಟ್ ಬಳಿ ಕರ್ನಾಟಕದ ಗಡಿ ಒಳಗೆ ಬಂದು ಮುಸ್ಲಿಂ ಲೀಗ್ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಅವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಮೊದಲು ನಾಲ್ಕು ಬೈಕ್ ಗಳಲ್ಲಿ ಮುಸ್ಲಿಂ ಲೀಗ್ ಬಾವುಟದೊಂದಿಗೆ ರಾಜ್ಯದ ಗಡಿಯೊಳಕ್ಕೆ ಬಂದ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಸ್ಥಳಕ್ಕೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ತಕ್ಷಣ 50 ಬೈಕ್ ಗಳಲ್ಲಿ ಅಲ್ಲಿಗೆ ಬಂದ ಮುಸ್ಲಿಂ ಲೀಗ್ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಬೈಕ್ ಗಳು ಮತ್ತು ಮುಸ್ಲಿಂ ಲೀಗ್ ಪಕ್ಷದ ಬಾವುಟಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಕೇರಳ ಪೊಲೀಸರೂ ಸ್ಥಳಕ್ಕೆ ಬಂದಿದ್ದು, ಚರ್ಚೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.