ಪುತ್ತೂರು: ಕಾಲೇಜಿಗೆ ಸಂಬಂಧ ಪಡದ ಸಂಘಟನೆಯವರು ಕಾಲೇಜು ಆವರಣದೊಳಗೆ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ವಿದ್ಯಾರ್ಥಿನಿಯರಿಗೆ ಪ್ರೀತಿಯ ಆಮಿಷ ತೋರಿಸಿದ್ದಾರೆ ಎಂದು ಆರೋಪಿಸಿ, ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ, ನಗರದ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಮಹಾಲಿಂಗೇಶ್ವರ ದೇವಳ ಗದ್ದೆಯಿಂದ ಕಾಲೇಜು ಆವರಣದವರೆಗೆ ಮೆರವಣಿಗೆ ಮೂಲಕ ತೆರಳಿದ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಎಬಿವಿಪಿ ವಿಭಾಗ ಸಂಚಾಲಕ ಸಂದೇಶ್ ಮಾತನಾಡಿ, ‘ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕಾಲೇಜಿಗೆ ಸಂಬಂಧಪಡದ ಇತರ ಗುಂಪಿನ ನಡುವೆ ಸಂಘರ್ಷ ನಡೆದಿದೆ. ಪ್ರಾಂಶುಪಾಲರು ವಿಚಾರಣೆ ನಡೆಸಿ, ಹೊರಗಿನ ವ್ಯಕ್ತಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಬೇಕು. ಗಲಭೆಯ ಸತ್ಯಾಸತ್ಯತೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಸುರೇಶ್, ‘ಘಟನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಇಲ್ಲಿಯವರೆಗೆ ಕಾಲೇಜಿನ ಯಾವ ವಿದ್ಯಾರ್ಥಿಯನ್ನೂ ಅಮಾನತು ಮಾಡಿಲ್ಲ’ ಎಂದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಮಾತನಾಡಿ, ‘ಕೊಂಬೆಟ್ಟು ಕಾಲೇಜಿನಲ್ಲಿ ಮತಾಂಧ ಚಟುವಟಿಕೆಗೆ ಅವಕಾಶವಿಲ್ಲ. ಪ್ರೀತಿಯ ಆಮಿಷ ಒಡ್ಡುವ ವಿಚಾರಕ್ಕೆ ಸಂಬಂಧಿಸಿ ಕೂಲಂಕಷವಾಗಿ ತನಿಖೆ ನಡೆಸುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.