ಮಂಗಳೂರು: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಹಣ ನೀಡುವಂತೆ ಒತ್ತಾಯಿಸಿ, ಪೊಲೀಸ್ ವಸತಿ ಗೃಹಕ್ಕೆ ಕರೆದೊಯ್ದು ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಪೊಲೀಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್, ‘ಚಂಪಾಷಷ್ಠಿಯಂದು ನಾನು ಜ್ಯೂಸ್, ಐಸ್ಕ್ರೀಂ ವ್ಯಾಪಾರ ಮಾಡುತ್ತಿದ್ದು, ಪಂಚಮಿಯ ರಾತ್ರಿ 12 ಗಂಟೆ ಸುಮಾರಿಗೆ ಸ್ಟಾಲಿಗೆ ಬಂದ ಪೊಲೀಸ್ ಸಿಬ್ಬಂದಿ ಹಣ ನೀಡುವಂತೆ ಬೆದರಿಸಿದ್ದಾರೆ. ಹಣ ನೀಡದಿದ್ದಾಗ ನನ್ನನ್ನು ಠಾಣೆಯ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ.
ವಿಷಯ ತಿಳಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಜಮಾಯಿಸಿದ್ದು, ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾದ ಯುವಕನಿಗೆ ನ್ಯಾಯ ನೀಡದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಆದರೆ, ಈ ಬಗ್ಗೆ ಯಾವುದೇ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.