ಮಂಗಳೂರು: ನಗರದ ಖಾಸಗಿ ಆಸ್ಪತ್ರೆ ಅಧಿಕಾರಿಯ ದೂರನ್ನು ಆಧರಿಸಿ ವಶಕ್ಕೆ ಪಡೆದಿದ್ದ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು, ಕಾಂಗ್ರೆಸ್ ಕಾರ್ಯಕರ್ತರ ವಿರೋಧ ಹಾಗೂ ಆಸ್ಪತ್ರೆಯ ಮುಖ್ಯಸ್ಥರು ದೂರು ಹಿಂಪಡೆಯುವುದಾಗಿ ಹೇಳಿಕೆ ನೀಡಿದ್ದರಿಂದ ಶುಕ್ರವಾರ ಸಂಜೆ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.
ಕೆಲ ದಿನಗಳ ಹಿಂದೆ ನಗರದ ಇಂಡಿಯಾನ ಆಸ್ಪತ್ರೆಗೆ ತೆರಳಿದ್ದ ಸುಹೈಲ್ ಕಂದಕ್, ಆಸ್ಪತ್ರೆಯ ಮುಖ್ಯಸ್ಥರ ಜೊತೆ ಮಾತನಾಡಿ ಚಿಕಿತ್ಸೆಯ ಬಿಲ್ ಪಾವತಿಸದೆ ಮೃತದೇಹವನ್ನು ವಾರಸುದಾರರಿಗೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಮೇ 18ರಂದು ಆಸ್ಪತ್ರೆಯ ಅಧಿಕಾರಿ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದರು. ಆಗ ಅವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ, ವಾಪಸ್ ಕಳುಹಿಸಲಾಗಿತ್ತು.
ಆಸ್ಪತ್ರೆಯ ದಾದಿಯೊಬ್ಬರು ಶುಕ್ರವಾರ ನೀಡಿದ ದೂರಿನ ಮೇರೆಗೆ ಸುಹೈಲ್ ಕಂದಕ್ ಅವರನ್ನು ಮತ್ತೆ ವಶಕ್ಕೆ ಪಡೆಯಲಾಗಿತ್ತು. ವಿಷಯ ತಿಳಿದ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಮೊಹಿಯುದ್ದೀನ್ ಬಾವ, ಮುಖಂಡರಾದ ಮಿಥುನ್ ರೈ, ಲುಕ್ಮಾನ್ ಬಂಟ್ವಾಳ, ಎ.ಸಿ.ವಿನಯರಾಜ್, ಶಶಿಧರ ಹೆಗ್ಡೆ, ಆಸೀಫ್ ಡೀಲ್ಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಸುಹೈಲ್ರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಈ ಹಿಂದೆ ನೀಡಿದ ದೂರನ್ನು ಹಿಂಪಡೆಯುವುದಾಗಿ ಆಸ್ಪತ್ರೆಯ ಮುಖ್ಯಸ್ಥರು ಶುಕ್ರವಾರ ಸಂಜೆ ಹೇಳಿಕೆ ನೀಡಿದ ಬಳಿಕ, ಸುಹೈಲ್ ಕಂದಕ್ ಅವರನ್ನು ಬಿಡುಗಡೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.