
ಬಂಧನ (ಸಾಂದರ್ಭಿಕ ಚಿತ್ರ)
ಸುಳ್ಯ: ಕೆಲವು ತಿಂಗಳ ಹಿಂದೆ ಹಲ್ಲೆಗೊಳಗಾಗಿದ್ದ ಇಲ್ಲಿನ ಶಾಂತಿನಗರ ನಿವಾಸಿ, ಆಟೊ ಚಾಲಕ ಜಬ್ಬಾರ್ ಮೃತಪಟ್ಟಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಅ.16ರಂದು ತನ್ನ ಸಂಬಂಧಿಯ ಮಗನಾದ ಶಾಲಾ ಬಾಲಕನನ್ನು ಆಟೊ ಚಾಲಕ ಜಬ್ಬಾರ್ ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂಬ ಆರೋಪದ ಮೇಲೆ ಕುಪಿತಗೊಂಡ ರಫೀಕ್ ಪಡು (41), ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್. (42) ಬಾಡಿಗೆ ನೆಪದಲ್ಲಿ ಕರೆದೊಯ್ದು ಹಲ್ಲೆ ನಡೆಸಿದ್ದರು. ಮನೆಗೆ ಮರಳಿದ್ದ ಜಬ್ಬಾರ್ ಅ.17ರಂದು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಸ್ಪಂದಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಫೀಕ್ ಪಡು ಮತ್ತು ಮನೋಹರ್ ಸೇರಿ ಹಲ್ಲೆ ನಡೆಸಿದ ಪರಿಣಾಮ ತನ್ನ ಪತಿ ಮೃತಪಟ್ಟಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಬ್ಬಾರ್ ಪತ್ನಿ ಸುಮಯ್ಯಾ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು.
ಹಲ್ಲೆಯಿಂದ ಜಬ್ಬಾರ್ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟ ಕಾರಣ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ. ಮಂಗಳವಾರ ಆರೋಪಿ ರಫೀಕ್ನನ್ನು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯವು ಹೆಚ್ಚಿನ ತನಿಖೆಗಾಗಿ ಪೊಲೀಸ್ ವಶಕ್ಕೆ ನೀಡಿದೆ. ಮತ್ತೊಬ್ಬ ಆರೋಪಿ ಸಂಪಾಜೆಯ ಮನೋಹರ್ನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.