ಸುರತ್ಕಲ್: ಬಿಗಿ ಪೊಲೀಸ್ ಕಾವಲಿನಲ್ಲಿರುವ ಸುರತ್ಕಲ್ನಲ್ಲಿ ಶುಕ್ರವಾರ ಸಂಜೆ ಪೊಲೀಸರು ಪಥ ಸಂಚಲನ ನಡೆಸಿ, ಜನರಲ್ಲಿ ಧೈರ್ಯ ತುಂಬಿದರು. ಸುರತ್ಕಲ್, ಚೊಕ್ಕಬೆಟ್ಟು, ಕಾಟಿಪಳ್ಳ ಮಾರ್ಗವಾಗಿ ಗಣೇಶಪುರ ದೇಗುಲದ ತನಕ ಪಥ ಸಂಚಲನ ನಡೆಯಿತು.
ಸಂಜೆ 6 ಗಂಟೆಯ ನಂತರ ಎಲ್ಲ ಅಂಗಡಿ ಮುಂಗಟ್ಟುಗಳು ಬಂದಾದವು. ಬಸ್ ಸಂಚಾರ ಕೂಡ ಸ್ಥಗಿತಗೊಂಡಿತ್ತು.
‘ಸುರತ್ಕಲ್ನಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಿ, ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರದವರೆಗೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 1ರ ಬೆಳಿಗ್ಗೆ 8 ಗಂಟೆಯವರೆಗೆ ವಿಸ್ತರಿಸಲಾಗಿದೆ. ಶನಿವಾರ ಮತ್ತು ಭಾನುವಾರ ಮದ್ಯ ಮಾರಾಟವನ್ನು ಕೂಡ ನಿಷೇಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮದ್ಯದಂಗಡಿ ಬಂದ್: ಜಿಲ್ಲೆಯಾದ್ಯಂತ ಜುಲೈ 29ರಿಂದ ಅನ್ವಯವಾಗುವಂತೆ ಆಗಸ್ಟ್ 1ರ ಬೆಳಿಗ್ಗೆ 8 ಗಂಟೆಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಣೆ ಮಾಡುವಂತಿಲ್ಲ. ಬಾರ್, ವೈನ್ ಶಾಪ್ ಸೇರಿದಂತೆ ಎಲ್ಲ ಅಂಗಡಿಗಳನ್ನು ಮುಚ್ಚಬೇಕು. ಈ ಆದೇಶವನ್ನು ಅಬಕಾರಿ ಇಲಾಖೆಯ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಮಾತ್ರ ಮದ್ಯದಂಗಡಿ ಬಂದ್ಗೆ ಆದೇಶ ನೀಡಲಾಗಿತ್ತು. ಈಗ ಜಿಲ್ಲೆಯಾದ್ಯಂತ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇವುಗಳನ್ನೂ ಓದಿ..
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.