ADVERTISEMENT

ಲಂಚ: ಭೂಮಾಪಕನಿಗೆ 3 ವರ್ಷ 3 ತಿಂಗಳು ಸಜೆ, ₹ 20 ಸಾವಿರ ದಂಡ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 12:23 IST
Last Updated 7 ಅಕ್ಟೋಬರ್ 2022, 12:23 IST
ಮಹಾದೇವ ನಾಯಕ್‌
ಮಹಾದೇವ ನಾಯಕ್‌   

ಮಂಗಳೂರು: ಜಮೀನು ಸರ್ವೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪುತ್ತೂರು ಶಾಖೆಯ ಭೂಮಾಪಕ ಮಹಾದೇವ ನಾಯಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು 3 ವರ್ಷ 3 ತಿಂಗಳು ಸಜೆ ಹಾಗೂ ₹ 20,000 ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಅಪರಾಧಿಯು ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 3 ತಿಂಗಳ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

‘ಪುತ್ತೂರು ತಾಲ್ಲೂಕಿನ ಆರ್ಯಾಪುವಿನಲ್ಲಿ ತಮ್ಮ ತಂದೆ ಕೃಷ್ಣಪ್ಪ ಅವರ ಜಮೀನಿನ ಅಳತೆ ಮಾಡಿಸಲು ಮಹಾದೇವ ನಾಯಕ್‌ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದುಅಂಕಿತಾ ಎಂಬವರು 2014ರ ಮಾ.15ರಂದು ನಗರದ ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ADVERTISEMENT

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ ( ಪ್ರಸ್ತುತ ಕಾರ್ಕಳ, ಉಪ ವಿಭಾಗದ ಡಿವೈಸ್‌ಪಿ) ಎಸ್.ವಿಜಯ ಪ್ರಸಾದ್‌ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ವಕೀಲ ರವೀಂದ್ರ ಮುನ್ನಿಪ್ಪಾಡಿ ಅವರು ಸರ್ಕಾರದ ಪರವಾಗಿ ವಾದಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಸಂಬಂಧ 2021–22ನೇ ಸಾಲಿನಲ್ಲಿ ಒಟ್ಟು ಎಂಟು ಹಾಗೂ 2022ನೇ ಸಾಲಿನಲ್ಲಿ ನಾಲ್ಕು ಪ್ರಕರಣಗಳಲ್ಲಿ ಆರೋಪ ಸಾಬೀತಾಗಿ ಅಪರಾಧಿಗಳಿಗೆ ಶಿಕ್ಷೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.