
ಬಂಧನ
ಕಾಸರಗೋಡು: ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ಶುಲ್ಕ ವಸೂಲಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದು, ಈ ಸಂಬಂಧ ನಿರ್ಮಿಸಿದ್ದ ಚಪ್ಪರವನ್ನೂ ತೆರವುಗೊಳಿಸಿದ್ದಾರೆ.
ಶಾಸಕ ಎ.ಕೆ.ಎಂ.ಅಶ್ರಫ್, ಬ್ಲಾಕ್ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಲೆ, ಕುಂಬಳೆ ಗ್ರಾಮ ಪಂಚಾಯತಿ ಅಧ್ಯಕ್ಷ ವಿ.ಪಿಅಬ್ದುಲ್ ಖಾದರ್, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಕೆ.ಆರೀಫ್ ಸಹಿತ 15 ಮಂದಿ ಬಂಧಿತರು. ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಟೋಲ್ ಪ್ಲಾಜಾದಲ್ಲಿ ಶುಲ್ಕ ವಸೂಲಿ ನಡೆಸುತ್ತಿರುವುದನ್ನು ಪ್ರತಿಭಟಿಸಿ ಶಾಸಕ ಎ.ಕೆ.ಎಂ.ಅಶ್ರಫ್ ಅವರ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆಯಿದೆ.
ಮೆರವಣಿಗೆ-ಬಿಗಿ ವಾತಾವರಣ ಸೃಷ್ಟಿ:
ಈ ಮುಷ್ಕರಕ್ಕೆ ಬೆಂಬಲ ಸೂಚಿಸಿ ಬುಧವಾರ ರಾತ್ರಿ ಮುಸ್ಲಿಂ ಯೂತ್ ಲೀಗ್ ಮತ್ತು ಡಿವೈಎಫ್ಐ ಕಾರ್ಯಕರ್ತರು ಮೆರವಣಿಗೆ ಮೂಲಕ ಆಗಮಿಸಿ ಟಾಲ್ ಪ್ಲಾಜಾಕ್ಕೆ ಮುತ್ತಿಗೆ ನಡೆಸಿದರು.
ಈ ವೇಳೆ ಕೊಂಚ ಹೊತ್ತು ಬಿಗಿ ವಾತಾವರಣ ಸೃಷ್ಟಿಯಾಗಿದ್ದು, ಕೆಲವರು ಟೋಲ್ಗೇಟ್ನ ಕ್ಯಾಮೆರಾ, ಗೇಟ್ಗಳಿಗೆ ಮತ್ತು ವಾಹನಗಳನ್ನು ನಿಯಂತ್ರಿಸುವ ಹ್ಯಾಂಡಲ್ಗಳಿಗೆ ಹಾನಿ ಮಾಡಿದ್ದಾರೆ. ಸ್ಕ್ಯಾನರ್ಗಳಿಗೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಅಂಟಿಸಿದ್ದಾರೆ. ಕುಂಬಳೆ ಪೊಲೀಸರು ಆಗಮಿಸಿ ಪರಿಸ್ಥಿತಿ ಹತೋಟಿಗೆ ತಂದರು. ಈ ಸಂಬಂಧ 500 ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.