ಬಂಧನ
(ಪ್ರಾತಿನಿಧಿಕ ಚಿತ್ರ)
ಪುತ್ತೂರು(ದಕ್ಷಿಣ ಕನ್ನಡ): ನಗರದ ಹೊರವಲಯದ ಬಿರುಮಲೆ ಬೆಟ್ಟದಲ್ಲಿ ಬಾಲಕ ಮತ್ತು ಬಾಲಕಿ ಕುಳಿತುಕೊಂಡಿದ್ದಾಗ ಅವರನ್ನು ತಡೆದು, ಯುವಕ ಅನ್ಯಧರ್ಮದವನೆಂದು ನಿಂದಿಸಿ, ಸಾರ್ವಜನಿಕರನ್ನು ಸೇರಿಸಿ ಅವಮಾನಿಸಿದ್ದಲ್ಲದೆ, ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಡಬ ತಾಲ್ಲೂಕಿನ ಕುದ್ಮಾರು ನಿವಾಸಿ ಪುರುಷೋತ್ತಮ (43), ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ನಿವಾಸಿ ರಾಮಚಂದ್ರ (38) ಬಂಧಿತರು.
ಘಟನೆಗೆ ಸಂಬಂಧಿಸಿ ಬಾಲಕನ ತಂದೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
‘ನನ್ನ ಪುತ್ರ ಪರಿಚಯದ ಬಾಲಕಿಯೊಂದಿಗೆ ಶನಿವಾರ ಮಧ್ಯಾಹ್ನ ಬೈಕ್ನಲ್ಲಿ ಬಿರುಮಲೆ ಬೆಟ್ಟಕ್ಕೆ ತೆರಳಿ, ಕುಳಿತುಕೊಂಡಿದ್ದರು. ಆ ವೇಳೆ ಅಪರಿಚಿತ ಇಬ್ಬರು ಬಾಲಕ ಮತ್ತು ಬಾಲಕಿಯನ್ನು ತಡೆದು ಅವಾಚ್ಯವಾಗಿ ನಿಂದಿಸಿದ್ದಾರೆ. ನಿಮ್ಮ ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬಾಲಕ ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೊ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದಾರೆ. ಮಗನನ್ನು ಅನ್ಯಧರ್ಮದವನು ಎನ್ನುವುದು ವಿಡಿಯೊದಲ್ಲಿದೆ. ಈ ಘಟನೆಯ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದನೆ ಮಾಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.