ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ 1 ದನ, 3 ಗಂಡು ಕರುಗಳು ಸೇರಿ ನಾಲ್ಕು ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ವಾಹನ ಮತ್ತು ಸ್ವತ್ತುಗಳನ್ನು ವಶಕ್ಕೆ ತೆಗೆದುಕೊಂಡು ಚಾಲಕ ಜಯಂತ ಗೌಡ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಜಯಂತ ಗೌಡ ತನ್ನ ಮಗುವನ್ನು ವಾಹನದಲ್ಲಿ ಕುಳ್ಳಿರಿಸಿ ಜಾನುವಾರುಗಳನ್ನು ತುಂಬಿಸಿಕೊಂಡು ಯಾರಿಗೂ ಅನುಮಾನ ಬಾರದಂತೆ ವಾಹನವನ್ನು ಚಲಾಯಿಸಿಕೊಂಡು ಹೋಗಿ ಜಾನುವಾರುಗಳನ್ನು ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ತಲುಪಿಸುತ್ತಿದ್ದ ಎಂದು ಆಪಾದಿಸಲಾಗಿದೆ. ಈ ಬಗ್ಗೆ ಸುಳಿವು ಪಡೆದ ಬಜರಂಗ ದಳದ ಕಾರ್ಯಕರ್ತರು ಗೋವು ಸಾಗಾಟ ನಿರತನಾಗಿದ್ದ ಜಯಂತ ಗೌಡನ ವಾಹನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.