ADVERTISEMENT

ಮಂಗಳೂರು: ಬಡಾವಣೆ ನಿರ್ಮಾಣ ತ್ವರಿತಗೊಳಿಸಿ; ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 17:05 IST
Last Updated 13 ಜುಲೈ 2020, 17:05 IST
ಮಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಬಸವರಾಜ ಸೋಮವಾರ ಸಭೆ ನಡೆಸಿದರು
ಮಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಬಸವರಾಜ ಸೋಮವಾರ ಸಭೆ ನಡೆಸಿದರು   

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮೂಡ)ದಿಂದ ಕೈಗೆತ್ತಿಕೊಳ್ಳಲಾಗಿರುವ ಬಡಾವಣೆಗಳ ಕಾಮಗಾರಿಗಳನ್ನು ತ್ವರಿತಗೊಳಿಸಿ ನಿವೇಶನಗಳನ್ನು ಆದಷ್ಟು ಬೇಗನೆ ಸಾರ್ವಜನಿಕರಿಗೆ ನೀಡಬೇಕು ಎಂದು ನಗಾರಭಿವೃದ್ಧಿ ಸಚಿವ ಬಿ.ಎ. ಬಸವರಾಜ ನಿರ್ದೇಶನ ನೀಡಿದರು.

ನಗರದಲ್ಲಿ ಸೋಮವಾರ ಇಲಾಖಾಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಮೂಡಾದ ಬಡಾವಣೆ ನಿರ್ಮಾಣ ವಿಳಂಬ ಗತಿಯಲ್ಲಿ ಸಾಗುತ್ತಿದೆ. ಇದಕ್ಕೆ ವೇಗ ನೀಡಬೇಕು ಹಾಗೂ ಬಡಾವಣೆಯಲ್ಲಿ ಪತ್ರಕರ್ತರಿಗೆ ಶೇ 5 ಮೀಸಲಾತಿ ನೀಡಿ’ ಎಂದು ಸೂಚನೆ ನೀಡಿದರು.

‘60 ಸಾವಿರ ಎಲ್‍ಇಡಿ ದೀಪಗಳ ಅಳವಡಿಕೆಗೆ ಸರ್ಕಾರದಿಂದ ಅನುಮತಿ ದೊರೆತಿದ್ದು, ಕಾಮಗಾರಿಗೆ ಬೇಗನೆ ಚಾಲನೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಯ 37 ಐಸಿಯು ಕೊಠಡಿಗಳಿಗೆ ₹ 3.40 ಕೋಟಿ ವೆಚ್ಚದಲ್ಲಿ ದೀಪ ಅಳವಡಿಸುವ ಕಾಮಗಾರಿಯನ್ನು ಸ್ಮಾರ್ಟ್‍ಸಿಟಿ ವತಿಯಿಂದ ನಡೆಸಲಾಗುತ್ತಿದೆ’ ಎಂದು ಶ್ಲಾಘಿಸಿದರು.

ADVERTISEMENT

‘ತುಂಬೆ ಅಣೆಕಟ್ಟೆಗೆ ತಡೆಗೋಡೆ ಮತ್ತು ಚೆಕ್ ಡ್ಯಾಂ ನಿರ್ಮಾಣ ಮಾಡಿ ಕೊಡಿಬೇಕೆಂದು ಅಲ್ಲಿನ ಶಾಸಕರು ಮತ್ತು ಸಚಿವರ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ₹15 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರ ಕಾಮಗಾರಿಯನ್ನು ಸ್ಮಾರ್ಟ್‍ಸಿಟಿ ಅಡಿಯಲ್ಲಿ ನಡೆಸಲಾಗುತ್ತದೆ’ ಎಂದು ಸಚಿವರು ತಿಳಿಸಿದರು.

ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಿಂದ ತೊಂದರೆ ಎದುರಿಸಿದವರಿಗೆ ₹1.91 ಕೋಟಿ ಪರಿಹಾರ ನೀಡಲಾಗಿದ್ದು, ಉಳಿದವರಿಗೆ ಅದಷ್ಟು ಬೇಗನೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲಿನ ಚೆಕ್ ಡ್ಯಾಂ ನಿರ್ಮಾಣಕ್ಕೆ ₹5 ಕೋಟಿ ಬಿಡುಗಡೆಯಾಗಿದ್ದು, ಇದರ ಕಾಮಗಾರಿಯೂ ಶೇ 80 ರಷ್ಟು ಮುಕ್ತಾಯವಾಗಿದೆ’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ದಿವಾಕರ್ ಪಾಂಡೇಶ್ವರ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.