ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಉಳ್ಳಾಲ ನಗರಸಭೆ, ಬಂಟ್ವಾಳ ಪುರಸಭೆಯ ಫಲಿತಾಂಶ ಪ್ರಕಟವಾಗಿದೆ. ಪುತ್ತೂರು ನಗರಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದ್ದು, ಕಾಂಗ್ರೆಸ್ ತೆಕ್ಕೆಯಲ್ಲಿದ್ದ ನಗರಸಭೆಯ ಆಡಳಿತ ಚುಕ್ಕಾಣಿ ಹಿಡಿದಿದೆ.
ಒಟ್ಟು 31 ಸ್ಥಾನಗಳಲ್ಲಿ ಬಿಜೆಪಿ 25, ಕಾಂಗ್ರೆಸ್ 5 ಹಾಗೂ ಎಸ್ಡಿಪಿಐ ಒಂದು ಸ್ಥಾನದಲ್ಲಿ ಜಯಗಳಿಸಿವೆ.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ಸ್ವಕ್ಷೇತ್ರವಾದ ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಬಹುಮತ ಪಡೆಯುವಲ್ಲಿ ವಿಫಲವಾಗಿದೆ.
ಕಾಂಗ್ರೆಸ್ 13, ಬಿಜೆಪಿ ಹಾಗೂ ಎಸ್ಡಿಪಿಐ ತಲಾ 6, ಜೆಡಿಎಸ್ 4 ಮತ್ತು ಇಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ.
ತೀವ್ರ ಜಿದ್ದಾಜಿದ್ದಿನ ರಾಜಕೀಯಕಕ್ಕೆ ಸಾಕ್ಷಿಯಾಗಿದ್ದ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ 12 ಸ್ಥಾನ ಪಡೆದಿದೆ. ಬಿಜೆಪಿ 11 ಹಾಗೂ ಎಸ್ಡಿಪಿಐ 4 ಸ್ಥಾನ ಪಡೆದಿವೆ.
ಉಳ್ಳಾಲದಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರ ಪಡೆಯುವುದು ಬಹುತೇಕ ನಿಶ್ಚಿತವಾಗಿದೆ. ಬಂಟ್ವಾಳದಲ್ಲಿ ಅಧಿಕಾರ ಪಡೆಯಲು ಎಸ್ಡಿಪಿಐ ಬೆಂಬಲ ಅಗತ್ಯವಾಗಿದೆ. ಆದರೆ, ಇದುವರೆಗೆ ಎಸ್ಡಿಪಿಐ ವಿರುದ್ಧ ಹೋರಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಈಗ ಯಾವ ತಂತ್ರ ರೂಪಿಸಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.