ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆ.12ಕ್ಕೆ ತರಗತಿ ಆರಂಭವಾದರೂ, ಈವರೆಗೆ ಅತಿಥಿ ಉಪನ್ಯಾಸಕರ ನೇಮಕ ಆಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಆರೋಪಿಸಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅತಿಥಿ ಉಪನ್ಯಾಸಕರ ಸಂಘದ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಮನಮೋಹನ ಬಳ್ಳಡ್ಕ, ಅತಿಥಿ ಉಪನ್ಯಾಸಕರ ನೇಮಕ ಆಗದೆ, ವಿದ್ಯಾರ್ಥಿಗಳಿಗೆ ಸರಿಯಾಗಿ ತರಗತಿ ನಡೆಯುತ್ತಿಲ್ಲ. ಇನ್ನೊಂದೆಡೆ ಅತಿಥಿ ಉಪನ್ಯಾಸಕರು ಉದ್ಯೋಗವಿಲ್ಲದೆ ಬೀದಿಪಾಲಾಗುತ್ತಿದ್ದಾರೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಅದೇ ಕಾಲೇಜಿನಲ್ಲಿ ಮುಂದುವರಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾದ ವಿಭಾಗಗಳ ವಿದ್ಯಾರ್ಥಿಗಳನ್ನು ಸಮೀಪದ ಕಾಲೇಜುಗಳಿಗೆ ವರ್ಗಾಯಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಎಲ್ಲ ಕಾಲೇಜುಗಳಿಗೆ ನಿರ್ದೇಶನ ನೀಡಿದ್ದಾರೆ. ಇದರಿಂದ ಅತಿಥಿ ಉಪನ್ಯಾಸಕರು ಮಾತ್ರವಲ್ಲ, ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಈ ಅವೈಜ್ಞಾನಿಕ ನಿರ್ಧಾರವನ್ನು ವಾಪಸ್ ಪಡೆಯಬೇಕು. ಈಗಾಗಲೇ ಜನಪ್ರತಿನಿಧಿಗಳಿಗೆ ಮನವಿ ನೀಡಿ ಗಮನಸೆಳೆಯಲಾಗಿದೆ ಎಂದು ಹೇಳಿದರು.
ಸಂಘದ ರೇಷ್ಮಾ ಕೆ.ಎಸ್., ರಂಜಿತ್ ಪಿ.ಜೆ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.