ADVERTISEMENT

ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ಆಗ್ರಹ

ಬಾಲಕಿ ಸಾವಿಗೆ ನ್ಯಾಯ ದೊರಕಿಸಲು ಆಗ್ರಹಿಸಿ ವಿಹಿಂಪ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಮೇ 2022, 10:55 IST
Last Updated 9 ಮೇ 2022, 10:55 IST
ವಿಟ್ಲ ಕನ್ಯಾನದಲ್ಲಿ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್‌ ಬಜರಂಗದಳ, ದುರ್ಗಾವಾಹಿನಿ ಸಂಘಟನೆಗಳು ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು. –ಪ್ರಜಾವಾಣಿ ಚಿತ್ರ
ವಿಟ್ಲ ಕನ್ಯಾನದಲ್ಲಿ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್‌ ಬಜರಂಗದಳ, ದುರ್ಗಾವಾಹಿನಿ ಸಂಘಟನೆಗಳು ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು. –ಪ್ರಜಾವಾಣಿ ಚಿತ್ರ   

ಮಂಗಳೂರು: ವಿಟ್ಲ ಕನ್ಯಾನದಲ್ಲಿ ಬಾಲಕಿಯ ಸಾವಿಗೆ ಕಾರಣನಾದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ನೀಡಿದ ಕರೆಯಂತೆ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಎಬಿವಿಪಿ, ಮಾತೃಶಕ್ತಿ, ದುರ್ಗಾವಾಹಿನಿ ನೇತೃತ್ವದಲ್ಲಿ ನಗರದ ಮಲ್ಲಿಕಟ್ಟೆ ವೃತ್ತದ ಬಳಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಾನಂದ ಮೆಂಡನ್ ಮಾತನಾಡಿ, ಮೃತಪಟ್ಟ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಿಕಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಸಂಶಯವಿದ್ದು, ಕೂಲಂಕಷ ತನಿಖೆಯಾಗಬೇಕು. ಅಮಾಯಕ ಬಾಲಕಿಯ ಸಾವಿಗೆ ಕಾರಣನಾದ ಆರೋಪಿ ಹಮೀದ್‌ಗೆ ಗಲ್ಲು ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

ಇದೊಂದು ಲವ್‌ಜಿಹಾದ್ ಹತ್ಯೆಯಾಗಿದ್ದು, ಸಮಾಜ ತಲೆತಗ್ಗಿಸುವಂತಾಗಿದೆ. ಇಂತಹ ಘಟನೆಗಳು ಮುಂದೆ ಮರುಕಳಿಸಬಾರದು. ಪ್ರೀತಿ –ಪ್ರೇಮದ ನಾಟಕವಾಡಿ ಬಾಲಕಿಯನ್ನು ಬಲಿ ಪಡೆದ ಸಾಹುಲ್ ಹಮೀದ್ ಹಿಂದೆ ಇನ್ನೂ ಅನೇಕರು ಇರುವ ಅನುಮಾನವಿದೆ. ಸಮಗ್ರ ತನಿಖೆಯಿಂದ ಸತ್ಯ ಹೊರಬರಲು ಜಿಹಾದಿ ಮಾನಸಿಕತೆ ದೂರವಾಗುವವರೆಗೆ ಹೋರಾಟ ನಡೆಸಲಾಗುವುದು ಎಂದರು.

ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರ ₹ 10 ಲಕ್ಷ ಪರಿಹಾರ ಒದಗಿಸಬೇಕು ಎಂದು ಶಿವಾನಂದ ಮೆಂಡನ್ ವರು ಒತ್ತಾಯಿಸಿದರು.

ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಮಣಿಕಂಠ ಕಳಸ ಮಾತನಾಡಿ, ‘ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಆರಂಭದಲ್ಲಿಯೇ ಮಟ್ಟ ಹಾಕಬೇಕು. ಕರಾವಳಿಯಲ್ಲಿ ಯುವತಿಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ಹಿಂದೆ ಜಿಹಾದಿಗಳ ವ್ಯವಸ್ಥಿತ ಕೈವಾಡವಿರುವ ಶಂಕೆಯಿದೆ. ಯುವತಿಯರ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಿದೆ’ ಎಂದರು.

ಮಹಾನಗರ ಪಾಲಿಕೆ ಸದಸ್ಯರಾದ ದಿವಾಕರ ಪಾಂಡೇಶ್ವರ, ಕಿರಣ್ ಕುಮಾರ್, ಜಯಲಕ್ಷ್ಮೀ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲ ಕುತ್ತಾರ್, ವಿಭಾಗ ಸಂಚಾಲಕ ಭುಜಂಗ ಕುಲಾಲ್, ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪ್‌ವೆಲ್ ಇದ್ದರು.


ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.